ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದ್ದಾರೆ.





