ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದರು.
ಇನ್ನು ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಗ್ಯಾರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.





