Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕರ್ನಾಟಕ ಬಜೆಟ್‌: ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ತಮ್ಮ ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) 16 ಬಜೆಟ್‌ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಅಭೀವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೇ ಸಮಾಜದ ಅಂಚಿನಲ್ಲಿರುವ ಬುಡಕಟ್ಟು ಜನರಿಂದ ಹಿಡಿದು ಸಂಶೋಧನೆಯವರೆಗೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅಂತೆಯೇ ಮೈಸೂರು ಸುತ್ತ-ಮುತ್ತಲಿನ ಪ್ರದೇಶಗಳ ರೇಷ್ಮೇ ಬೆಳೆಗಾರರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು ನಬಾರ್ಡ್‌ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು. ಅಲ್ಲದೇ ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ಶುಚಿ ಮತ್ತು ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಹೈ-ಟೆಕ್‌ ಮತ್ಸ್ಯ ದರ್ಶಿನಿ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

120 ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್‌ ನಿಲ್ದಾಣ

ಮೈಸೂರು ನಗರದಲ್ಲಿ ಪ್ರಸಕ್ತ ವರ್ಷದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಕಚೇರಿಗಳನ್ನು ಸ್ಥಾಪನೆ ಮಾಡಲಾಗುವುದು. ಈ ನಗರದ ವ್ಯಾಪ್ತಿಯಲ್ಲಿ ಅಗ್ನಿಶಾಮಕ ಠಾಣೆ ಇರುವ ಪಾರಂಪರಿಕ ಕಟ್ಟಡದ ಒಂದು ಭಾಗ ಶಿಥಿಲಗೊಂಡು ಕುಸಿದುಬಿದ್ದಿತ್ತು. ಹೀಗಾಗಿ 2.3 ಕೋಟಿ ರೂ. ವೆಚ್ಚದಲ್ಲಿ ನೂತನ ಅಗ್ನಿಶಾಮಕ ಠಾಣೆಯ ಕಟ್ಟಡವನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು.

ನಗರದ ಬನ್ನಿಮಂಟಪದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾಉ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈಗಿರುವ ಕೇಂದ್ರ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಅಲ್ಲಿನ ವ್ಯಾಪಾರಿಗಳು, ಹೋಟೆಲ್ ಹಾಗೂ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆಯೂ ಯೋಜನೆಯನ್ನು ಬಜೆಟ್‌ನಲ್ಲೇ ಪ್ರಸ್ತಾಪಿಸಲಾಗಿದೆ ಎಂದರು.

2025-26ನೇ ಸಾಲಿನಲ್ಲಿ ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ ಕಬಿನಿ ನದಿಗೆ ಅಡ್ಡಲಾಗಿ ಮತ್ತು ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆಗಳನ್ನು ನಿರ್ಮಿಸಲಾಗುವುದು. ಅಲ್ಲದೇ ಕೆಶಿಪ್-4 ಮಂಡ್ಯ ಜಿಲ್ಲೆಯ ಮಳವಳ್ಳಿ- ಮೈಸೂರು ಜಿಲ್ಲೆಯ ಬಾವಲಿ ರಸ್ತೆ ಮಾರ್ಗವಾಗಿ 141 ಕಿ.ಮೀ. ಹಾಗೂ ಹುಲ್ಲಹಳ್ಳಿ ರಸ್ತೆ ಸೇರಿದಂತೆ ತಗಡೂರು ಮತ್ತು ಸಂತೇಮರಹಳ್ಳಿಯ 55 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಇನ್ನು ಹೊಸ ತಾಲ್ಲೂಕು ಸಾಲಿಗ್ರಾಮದಲ್ಲಿ ತಾಲ್ಲೂಕು ಪ್ರಜಾಸೌಧ ನಿರ್ಮಾಣದ ಕುರಿತು ಚಿಂತಿಸಲಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ 319 ಕೋಟಿ ರೂ. ಅನುದಾನ

ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ನಗರದಲ್ಲಿ ನವೋದ್ಯಮ ಪರಿಸರ ವ್ಯವಸ್ಥೆ ಅಭಿವೃದ್ಧಿಪಡಿಸುವುದರೊಂದಿಗೆ ಜಾಗತಿಕ ಸಾಮರ್ಥ್ಯ ಕೇಂದ್ರಗಳ ವಲಯದಲ್ಲಿ ರಾಜ್ಯದ ನಾಯಕತ್ವವನ್ನು ಇನ್ನಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೋವೇಶನ್ ಡಿಸ್ಟ್ರಿಕ್ಸ್ ಆಗಿ ಮೈಸೂರನ್ನು ಅಭಿವೃದ್ಧಿಪಡಿಸಲಾಗುವುದೆಂದು ಘೋಷಿಸಲಾಗಿದೆ ಎಂದರು.

ಮೈಸೂರಿನ 150 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲು ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು. ಅಲ್ಲದೇ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ 2,500 ಪ್ರಾಚೀನ ತಾಳೆಗರಿಯ ಹಸ್ತ ಪ್ರತಿಗಳ ಡಿಜಿಟಲೀಕರಣ ಯೋಜನೆಯನ್ನು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಜೊತೆಗೆ ಕಲಾ ಮಂದಿರದ ರಂಗಾಯಣ ಕಾರ್ಯಚಟುವಟಕೆಗಳಿಗೆ 2 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್‌ ರೇಂಜ್‌ ವ್ಯವಸ್ಥೆ

ರಾಜ್ಯದ 4 ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್‌ಗಳನ್ನು ಮುಂದಿನ ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಅವುಗಳಲ್ಲಿ ಮೈಸೂರಿಗೂ ಒಂದು ದೊರೆಯಲಿದೆ. ಹಾಗಾಗಿ ಮೈಸೂರು ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್ ಮತ್ತು ಖೋ-ಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು ಯುನೆಸ್ಕೋಗೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗಿ ಜಾತಿಕ ಮಾನ್ಯತೆ ಗಳಿಸಿರುವ ಪ್ರವಾಸಿತಾಣವಾದ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಸೋಮನಾಥಪುರದ ಚನ್ನಕೇಶವ ದೇವಾಲಯದ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಆದರೆ ಈ ತಾಣಕ್ಕೆ ಅನುದಾನದ ಪ್ರಸ್ತಾಪವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ರಾಜಕೀಯ ಗುರು ನೆನಪಿನಾರ್ಥ ವಿಶ್ವವಿದ್ಯಾನಿಲಯದಲ್ಲಿ ಪೀಠ ಸ್ಥಾಪನೆ

ತಮ್ಮ ರಾಜಕೀಯ ಗುರು ನಂಜುಂಡಸ್ವಾಮಿ ಅವರ ಪ್ರಭಾವಕ್ಕೆ ಒಳಗಾಗಿ ರಾಜಕೀಯ, ಹೋರಾಟ ಹಾಗೂ ಜನಪರ ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದೆ. ಅವರ ನೆನಪಿನಾರ್ಥ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಂಶೋಧನಾ ಪೀಠವನ್ನು ಆರಂಭಿಸಲಾಗುವುದು ಎಂದರು.

ಇನ್ನು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿರುವ ತಗಡೂರು ಗ್ರಾಮ ಸಮುದಾಯದ ಆರೋಗ್ಯ ಕೇಂದ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದು ಅನುಷ್ಠಾನಗೊಂಡಲ್ಲಿ, ಆ ಭಾಗದ ಹಳ್ಳಿಗಳ ಜನಸಾಮಾನ್ಯರಿಗೆ ಸುಧಾರಿತ ಸೌಲಭ್ಯಗಳು ದೊರೆಯುವ ಆಶಯವಿದೆ ಎಂದು ಹೇಳಿದರು.

ಬುಡಕಟ್ಟು ಜನತೆಯ ಮೂಲಭೂತ ಸೌಕಾರ್ಯ ಒದಗಿಸಲು 200 ಕೋಟಿ ರೂ. ಅನುದಾನ ಬಿಡುಗಡೆ

ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುತ್ತಿರುವ ಸೋಲಿಗ, ಹಲಸರು, ಜೇನು ಕುರುಬ, ಗೌಡಲು, ಸಿದ್ದಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಕೊರಗ, ಬೆಟ್ಟಕುರುಬ, ಯರವ, ಪಣಿಯನ್ ಸೇರಿದಂತೆ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಅನುದಾನ ನೀಡಲಾಗುವುದು. ಜೊತೆಗೆ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನರಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿ ಕೈಗೊಳ್ಳಲಾಗುವುದು. ಇದು ಮೈಸೂರು ಜಿಲ್ಲೆಯ ಹಲವು ಬುಡಕಟ್ಟು ಜನರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025- 26ನೇ ಸಾಲಿನಿಂದ 7ನೇ ತರಗತಿ ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು. ಅಲ್ಲದೇ ರಾಜ್ಯದ ಬುಡಕಟ್ಟು ಸಂಸ್ಕೃತಿಯನ್ನು ಪರಿಚಯಿಸಲು ಮೈಸೂರು ನಗರದಲ್ಲಿ ನಡೆಸಲಾಗುತ್ತಿರುವ ಬುಡಕಟ್ಟು ಸಂಶೋಧನಾ ಕೇಂದ್ರದ ಅವರಣದಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್‌ ಸಂಸ್ಥೆ ಸ್ಥಾಪನೆ

ಮೈಸೂರು ಹಾಗೂ ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿತ ಎಂಡೋಕ್ರೈನಾಲಜಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಮೈಸೂರು ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವ ಘೋಷಣೆಯೊಂದಿಗೆ ಈ ಭಾಗದ ಜನರಿಗೆ ಬಂಪರ್‌ ಕೊಡುಗೆಯನ್ನು ಅವರು ನೀಡಿದ್ದಾರೆ.

ಮೈಸೂರು ಹಾಗೂ ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು 5 ಕೋಟಿ ರೂ. ಅನುದಾನ ನೀಡಲಾಗುವುದು. ಅವುಗಳ ನಿರ್ವಹಣೆಯನ್ನು ಸ್ವಯಂಸೇವಾ ಸಂಸ್ಥೆಗಳ ಸಹಕಾರದಲ್ಲಿ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ ಮತ್ತು ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತಿ ಜಿಲ್ಲೆಗೆ ಒಂದರಂತೆ ವಸತಿ ಶಾಲೆಗಳನ್ನು ಪಿಯುಸಿ ಕಾಲೇಜುಗಳಾಗಿ ಉನ್ನತೀಕರಿಸಲಾಗುವುದು. ಈ ಪೈಕಿ ಮೈಸೂರಿಗೂ ಒಂದು ದೊರೆಯಿದೆ ಎಂದು ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಕೊಡುಗೆ

ನಬಾರ್ಡ್ ಸಹಯೋಗದೊಂದಿಗೆ ಸ್ವಕ್ಷೇತ್ರ ವರುಣದಲ್ಲಿನ ಬಿಟಿಟಿಸಿ ಬಹು ಕೌಶಲ ಅಭಿವೃದ್ಧಿ ಕೇಂದ್ರಕ್ಕೆ 60 ಕೋಟಿ ರೂ. ಅನುದಾನ ಒದಗಿಸಿ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರವನ್ನು ಕಾರ್ಯಾರಂಭ ಮಾಡಲಾಗುವುದು. ಅಲ್ಲದೇ ಅಂತರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 501 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಆ ಸ್ಥಳದಲ್ಲಿ ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ವರುಣ ಕ್ಷೇತ್ರದ ವ್ಯಾಪ್ತಿಯಲ್ಲೇ ಬರುವ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಜಾಗ ಗುರುತಿಸಲಾಗಿದೆ ಎಂದು ತಿಳಿಸಿ ಮೈಸೂರು ಜಿಲ್ಲೆಗೆ ಬಂಪರ್‌ ಕೊಡುಗೆ ನೀಡಿದ್ದಾರೆ.

 

 

Tags:
error: Content is protected !!