Mysore
21
overcast clouds
Light
Dark

ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಅಪಹಾಸ್ಯ

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ.

ಲೋಕಸಭೆ ಚುನಾವಣೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಎಲ್ಲಾ ಕಡೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇವಾಗ ನೋಡಿ, ಒಬ್ಬರಿಗೊಬ್ಬರು ರಸ್ತೆಗಳಲ್ಲಿ ನಿಂತುಕೊಂಡು ಬಡಿದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನೂ ಏನೇನೋ ಆಗುತ್ತೋ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಪಹಾಸ್ಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದರು. ಜನರ ಪಾಲಿಗೆ ಸರ್ಕಾರ ಬದುಕಿದೆಯಾ ಎಂಬ ಪ್ರಶ್ನೆಯನ್ನು ಜನರೆಲ್ಲಾ ಪ್ರಶ್ನೆ ಮಾಡ್ತಿದ್ದಾರೆ. ಈ ಸರ್ಕಾರದ ವಿರುದ್ಧ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೊಡೆದಾಡಿಕೊಳ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಇರೋದು ಇನ್ನು ಹೋರಾಟದ ದಿನಗಳು ಮಾತ್ರ. ಮುಂದೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡ್ತೀವಿ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿಯನ್ನು ಹೊರ ರಾಜ್ಯಗಳಿಗೆ ತೆಗೆದುಕೊಂಡು ಹೋಗಿದ್ದಾರೆ. ರಾಜ್ಯ ಸರ್ಕಾರದಲ್ಲಿ ಬರೀ ಅವ್ಯವಹಾರಗಳೇ ಇವೆ. ಹೀಗಾಗಿ ನಮ್ಮ ಹೋರಾಟ ನಿರಂತರ ಎಂದು ಎಚ್ಚರಿಕೆ ನೀಡಿದರು.