Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ವಾಣಿಜ್ಯ ತೆರಿಗೆ ಸಂಗ್ರಹ| ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು: ಸಿ.ಎಂ

ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು: ಸಿ.ಎಂ ಸ್ಪಷ್ಟ ಸೂಚನೆ

ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ  ನೇರವಾಗಿ ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ  ಸ್ಪಷ್ಟ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಸೂಚನೆ ನೀಡಿದರು.‌

2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ. 1,10,000 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್‌ ಅಂತ್ಯದವರೆಗೆ ಒಟ್ಟು ರೂ. 58,773 ಕೋಟಿ ಸಂಗ್ರಹಿಸಲಾಗಿದ್ದು, ಇದರಲ್ಲಿ ಜಿಎಸ್‌ಟಿ ರೂ. 44,783 ಕೋಟಿ, ಕೆಎಸ್‌ಟಿ ರೂ. 13,193 ಕೋಟಿ, ವೃತ್ತಿ ತೆರಿಗೆ ರೂ. 797 ಕೋಟಿ ಸೇರಿದೆ ಎಂದರು.

ಅಕ್ಟೋಬರ್‌ ಕೊನೆಯವರೆಗೆ ಶೇ.53.5 ಗುರಿ ಸಾಧನೆಯಾಗಿದೆ. 2023-24ನೇ ಸಾಲಿಗೆ ಹೋಲಿಸಿದರೆ ರೂ.5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿರುತ್ತದೆ. ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ರೂ.10200ಕೋಟಿ ತೆರಿಗೆ ಸಂಗ್ರಹ ಗುರಿಯನ್ನು ಇರಿಸಿ ಮಾರ್ಚ್‌ ಒಳಗಾಗಿ ಗುರಿಯನ್ನು ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿಯನ್ನು ಸಾಧಿಸಬೇಕಿದೆ ಎಂದರು.

ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ನಿಗದಿತ ಗುರಿಯನ್ನು ಸಾಧಿಸದ ಅಧಿಕಾರಿಗಳನ್ನು ಹೊಣೆಗಾರ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ರೂ. 2ಸಾವಿರ ಕೋಟಿ ಹೆಚ್ಚುವರಿ ಸಂಗ್ರಹಣೆಯ ನಿರೀಕ್ಷೆಯಿದೆ ಎಂದರು.

ಅಬಕಾರಿ ಇಲಾಖೆ ತೆರಿಗೆ ಸಂಗ್ರಹ ಪರಿಶೀಲನೆ

• 2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ. 38525 ಕೋಟಿ ಅಬಕಾರಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್‌ 28ರವರೆಗೆ ರೂ. 20237 ಕೋಟಿ ಸಂಗ್ರಹವಾಗಿದೆ.

• ಇದುವರೆಗೆ ಶೇ.52.53 ಗುರಿ ಸಾಧನೆ ಮಾಡಲಾಗಿದ್ದು, ಮಾರ್ಚ್‌ ಒಳಗಾಗಿ ನಿಗದಿತ ಗುರಿಯನ್ನು ಸಾಧಿಸಲು ಕ್ರಮ ಕೈಗೊಳ್ಳಬೇಕು.

• ಕಳೆದ ವರ್ಷಕ್ಕಿಂತ ಈ ಅವಧಿಯಲ್ಲಿ 1301.15ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.

• ಗೋವಾದಿಂದ ಅಕ್ರಮ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

• ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!