ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಮಹಿಳೆಯರ ಜೊತೆ ಆಗಮಿಸಿ ಬೆಂಗಳೂರಿನಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಸಾಮೂಹಿಕ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಹಿತ ಮಹಿಳಾ ಆಯೋಗಕ್ಕೆ ನೀಡಿ ದೂರು ನೀಡಿದ್ದಾರೆ. ಈ ವೇಳೆ ಮಾತನಾಡಿದ ಕಾವೇರಿ ಹೆಣ್ಣುಮಕ್ಕಳ ಘನತೆಗೆ ಧಕ್ಕೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತರ ಮೇಲೆ ತುಂಬಾ ಹೀನವಾಗಿ ಮಾತಾಡಿದ್ದಾರೆ. ಕೇವಲ ಬಡವರು ಮಾತ್ರವಲ್ಲ, ಹರಕೆ ಹೊತ್ತು ಧರ್ಮಸ್ಥಳದಲ್ಲಿ ಮದುವೆ ಆಗುತ್ತಾರೆ. ಸಾವಿರಾರು ಕುಟುಂಬಗಳು ಅಲ್ಲಿ ಮದುವೆಯಾಗಿ ಉತ್ತಮ ಜೀವನ ನಡೆಸುತ್ತಿದ್ದಾರೆ. ಅಂತಹ ಹೆಣ್ಣುಮಕ್ಕಳನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಶ್ರೀಕ್ಷೇತ್ರದ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದು ಮಾತ್ರವಲ್ಲ, ಸಾಮೂಹಿಕ ಮದುವೆಯಾದ ಎಲ್ಲರನ್ನೂ ಅವಹೇಳನ ಮಾಡಿದ್ದಾರೆ. ಈ ಬಗ್ಗೆ ಕೂಡಲೇ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.





