ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಹೇಳಿದ್ದಾರೆ.
ಅವರು ಇಂದು (ಆಗಸ್ಟ್ 25) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೆಟ್ರೊ ನಿಲ್ದಾಣದ ಬಳಿ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಹವಾನಿಯಂತ್ರಿತ ಮಾರುಕಟ್ಟೆ ಕೃಷ್ಣದೇವರಾಯ ಪಾಲಿಕೆ ಬಜಾರ್ ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡುತ್ತಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುವುದಾಗಿಯೂ ಹೇಳಿದ್ದರು. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ವಿರುದ್ಧವಾಗಿದ್ದಾರೆ. ಶಕ್ತಿ, ಅನ್ನ ಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ಯ್ರ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದರು.





