ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಿ ಒಂದು ವಾರದೊಳಗೆ ಕೋರ್ಟ್ ಮುಂದೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಕಳೆದ 2016ರ ಜೂನ್.15ರಂದು ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಯೋಗೇಶ್ ಗೌಡನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಇದರಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಿಸಿ, 2020ರ ನವೆಂಬರ್.5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.





