ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು, ಸಚಿನ್ ಕಾಂಟ್ರಾಕ್ಟರ್ ಅಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅವರು ಡೆತ್ನೋಟ್ನಲ್ಲಿ ಏನು ಬರೆದಿಟ್ಟಿದ್ದಾರೆ? ಡೆತ್ನೋಟ್ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷಗಳು ಪದೇ ಪದೇ ಟಾರ್ಗೆಟ್ ಮಾಡುತ್ತಿವೆ. ಪ್ರಿಯಾಂಕ್ ಖರ್ಗೆ ಸ್ವಲ್ಪ ಆಕ್ಟೀವ್ ಇದ್ದಾರೆ. ಇದನ್ನು ವಿಪಕ್ಷಗಳು ಸಹಿಸಿಕೊಳ್ಳುತ್ತಿಲ್ಲ. ಹಾಗಾಗಿ ಅವರನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಉಪಚುನಾವಣೆ ಬಳಿಕ ಸ್ವಲ್ಪ ನರ್ವಸ್ ಆಗಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಉಪಚುನಾವಣೆ ಆದ ಮೇಲೆ ರಾಜ್ಯದ ಪರಿಸ್ಥಿತಿ ಬದಲಾಗಿದೆ. ಸದ್ಯದಲ್ಲೇ ಅವರ ಹೇಳಿಕೆಗಳೂ ಬದಲಾಗಬಹುದು ಎಂದು ಕಿಡಿಕಾರಿದರು.





