ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ಹಾಗೂ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಪಾಳೆಗಾರಿಕೆ ಸಂಸ್ಕೃತಿಯನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಧಿಕಾರ ಶಾಶ್ವತ ಎನ್ನುವ ಭಾವನೆಯಲ್ಲಿ ಡಿಕೆಶಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರೂ ಕೂಡ ಎರಡೂವರೆ ವರ್ಷದಿಂದ ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು ಇವರಿಂದ ಸಾಧ್ಯವಾಗಿಲ್ಲ. ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಎಂಬ ಹೊಸ ಡ್ರಾಮಾ ಶುರು ಮಾಡಿದ್ದಾರೆ. ಇದರಿಂದ ಯಾರಿಗೆ ಏನು ಪ್ರಯೋಜನ? ಈಗ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಓರ್ವ ಜನಪ್ರತಿನಿಧಿಗೆ ಗೌರವ ಕೊಡದಿರುವುದು ಸರಿಯಲ್ಲ. ಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರಗಳನ್ನು ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




