ಬೆಂಗಳೂರು: ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಜಾತಿ ಜನಗಣತಿ ವರದಿಯನ್ನು ರಾಜ್ಯ ಸರ್ಕಾರ ಮಂಡಿಸಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, 17ರಂದು ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಚರ್ಚಿಸುವ ಒಂದು ವಿಷಯ ಮಾತ್ರ ಇದೆ. ಆ ಸಭೆಯ ಬಳಿಕ ನಾನು ಮಾತನಾಡುತ್ತೇನೆ. ಅದಕ್ಕೂ ಮುನ್ನ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದರು.
ಜಾತಿ ಜನಗಣತಿಯ ವರದಿ ರಾಜ್ಯದಲ್ಲಿ ಕಿಚ್ಚು ಹಚ್ಚಿದ್ದು, ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಒಳವಲಯದಲ್ಲೇ ಬಹಳಷ್ಟು ಮಂದಿ ಜಾತಿವಾರು ಜನಸಂಖ್ಯೆ ಲೆಕ್ಕಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಸಚಿವರು ವರದಿ ತಮ್ಮ ಕೈ ಸೇರಿದೆ. ಅದನ್ನು ಅಧ್ಯಯನ ಮಾಡಿದ ಬಳಿಕ ಪ್ರತಿಕ್ರಿಯಿಸುತ್ತೇವೆ ಎಂದು ಜಾರಿಕೊಳ್ಳುತ್ತಿದ್ದಾರೆ.
ಹೀಗಿರುವಾಗ ಕಾಂಗ್ರೆಸ್ ನಾಯಕರು ಮಾತ್ರ ತಮ್ಮದೇ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಪರದಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ಹೇಳಿಕೆ ನೀಡಲು ಇಂದು ಹಿಂದೇಟು ಹಾಕಿದ್ದಾರೆ.