ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಸಲಾಗಿದ್ದು, ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಭಾಗಿಯಾಗಿದ್ದರು.
ಸಂಭ್ರಮಾಚರಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು ದೊರೆತಿದೆ. ದೆಹಲಿಯ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು.





