ಬೆಳಗಾವಿ: ರಾಜ್ಯದಲ್ಲಿ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಸುಮಾರು 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಇಂದು(ಡಿಸೆಂಬರ್.16) ಸದನದಲ್ಲಿಉತ್ತರಿಸಿದ ಅವರು, ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳಲ್ಲಿ ತಪಾಸಣೆ ಜಾಸ್ತಿ ಮಾಡಿರುವುದರಿಂದ ಹೆಚ್ಚು ಭ್ರೂಣ ಹತ್ಯೆಯ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯುವುದಕ್ಕಾಗಿ ಸರ್ಕಾರ ಗರ್ಭಧಾರಣೆಯ ಪೂರ್ವ ಮತ್ತು ಪ್ರಸವ ರೋಗನಿರ್ಣಯ ತಂತ್ರ ಕಾಯಿದೆ ಅಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇಕಡಾ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ʼಬಾಲಿಕಾʼ ಆನ್ಲೈನ್ ಸಾಫ್ಟ್ವೇರ್ ಮೂಲಕ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ನೋಂದಣಿ ನಡೆಸಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಪಿ.ಸಿ ಮತ್ತು ಪಿ.ಎನ್.ಡಿ.ಟಿ. ಕಾಯ್ದೆ ಉಲ್ಲಂಘಿಸಿದ ಸ್ಕ್ಯಾನಿಂಗ್ ಸೆಂಟರ್, ಮಾಲೀಕರು, ವೈದ್ಯರ ಮೇಲೆ 136 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.ಇದರಲ್ಲಿ 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿದೆ ಎಂದಿದ್ದಾರೆ.
ಭ್ರೂಣ ಹತ್ಯೆ ಮಾಡುವವರ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಜೊತೆಗೆ ಭ್ರೂಣ ಹತ್ಯೆ ತಡೆಯಲು ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಪರಿಣಾಮಕಾರಿಯಾಗಿಸಲು ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆ ರಚಿಸಲಾಗಿದೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.