ಬೆಂಗಳೂರು: ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ಬಗ್ಗೆ ಈಗಾಗಲೇ ಚರ್ಚೆಗಳಾಗುತ್ತಿವೆ. ಅದರ ಕುರಿತು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ಈ ಕುರಿತು ನನ್ನನ್ನು ಕೇಳಬೇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕೇಳಿ ಎಂದು ಹೇಳಿದ್ದಾರೆ.
ಇನ್ನು ಚುನಾವಣಾ ಅಕ್ರಮಗಳ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರವೊಂದರ ಕುರಿತು ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ಅಧ್ಯಯನ ನಡೆಸಲಾಗಿದೆ. ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ಕಡಿತವಾಗಿದೆ. ಇನ್ನೂ ಕೆಲವು ಕಡೆ ಅನಗತ್ಯವಾಗಿ ಹೆಚ್ಚುವರಿ ಸೇರ್ಪಡೆಗಳಾಗಿವೆ ಎಂಬ ಆರೋಪಗಳಿವೆ.
ಮತದಾರರ ಸೇರ್ಪಡೆ ಹಾಗೂ ತೆಗೆದು ಹಾಕುವಿಕೆಯ ಅಕ್ರಮಗಳ ಮೂಲಕವೇ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂಬ ಆರೋಪಗಳು ವ್ಯಾಪಕವಾಗುತ್ತಿವೆ.





