ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ನಿಂದ ಬುಲಾವ್ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.
ಈ ಬೆಳವಣಿಗೆ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಇದು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಿಡಿಕಾರಿವೆ. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಎಂದು ಟೀಕಿಸಿವೆ.





