ಬೆಂಗಳೂರು: ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ಇಂದು ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ ಕಾನೂನು ರೀತಿಯ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.




