ಬೆಂಗಳೂರು: ರಾಜ್ಯದಲ್ಲಿ ಎಚ್ಎಂಪಿವಿ ವೈರಸ್ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೀನಾ ದೇಶದಲ್ಲಿ ಎಚ್ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಈ ವೈರಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಆದ್ದರಿಂದ ಹೆಚ್ಚಿನ ರೀತಿಯಲ್ಲಿ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಆರೋಗ್ಯ ಸಚಿವರು ಈ ಬಗ್ಗೆ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಇನ್ನು ಸೋಂಕು ತಡೆಯ ಕ್ರಮವಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಸ್ಕ್ರೀನಿಂಗ್ ಪುನಃ ಪ್ರಾರಂಭಿಸುವ ಬಗ್ಗೆ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಈ ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಎಚ್ಚರಿಕೆ ನೀಡಿದರು.





