ಕಾರವಾರ: ಬೆಳ್ಳಂಬೆಳಿಗ್ಗೆ ಕಾರವಾರ ತಾಲ್ಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಸಶಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಈ ವೇಳೆ ಯಾರೂ ಕೂಡ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಮನೆಯಲ್ಲಿರುವ ಕೆಲಸದವರನ್ನು ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಸಂಬಂಧ ಶಾಸಕರಿಗೂ ಬುಲಾವ್ ಹೋಗಿದೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು.
ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆ ಕೂಡ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.
ಈಗ ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.





