ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವರು, ಕೃಷಿ ಸಲಕರಣೆ ಮತ್ತು ಯಂತ್ರೋಪಕರಣಗಳಿಗೆ ರೈತರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, 2025- 26 ನೇ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ 428 ಕೋಟಿ ಅನುದಾನ ಮೀಸಲಿಟ್ಟಿದ್ದು, ಇಲ್ಲಿಯವರೆಗೆ 320 ಕೋಟಿ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದ್ದು, 271 ಕೋಟಿ ವೆಚ್ಚದಲ್ಲಿ 69722 ರೈತರಿಗೆ ಸಹಾಯಧನ ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು..
ಇದನ್ನು ಓದಿ: ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ
ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು, ಕೃಷಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಹೆಚ್ಚಿನ ಇಳುವರಿ ಪಡೆಯಲು ರೈತರಿಗೆ ಕೃಷಿ ಯಂತ್ರೋಪಕರಣಗಳು ಸಹಕಾರಿಯಾಗುತ್ತಿದೆ ಎಂದು ಸಚಿವರು ಹೇಳಿದರು..
ಕೃಷಿ ಯಾಂತ್ರಿಕರಣ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಒದಗಿಸಿದ ಅನುದಾನ ಮತ್ತು ರಾಜ್ಯವಲಯದ ಯೋಜನೆಗಳಡಿ ಒದಗಿಸಿದ ಅನುದಾನವನ್ನು ಸಮನ್ವಯಗೊಳಿಸಿ ಅತ್ಯುತ್ತಮ ವಾಗಿ ಕೃಷಿ ಯಾಂತ್ರಿಕರಣ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು..
ಕೃಷಿ ಯಾಂತ್ರಿಕರಣ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ 50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ಗರಿಷ್ಠ ರೂ. 1 ಲಕ್ಷದ ಮೀತಿಯೊಳಗೆ ಸಹಾಯಧನವನ್ನು ನೀಡಲಾಗುತ್ತಿದೆ.
ಟ್ರಾಕ್ಟರ್ ಗಳಿಗೆ (45 HP) ಸಾಮನ್ಯ ರೈತರಿಗೆ ರೂ. 0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರ ಗರಿಷ್ಠ ರೂ. 3 ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿಯವರು ತಿಳಿಸಿದರು..





