ರಾಜ್ಯ

ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ : ಸುಳಿವು ನೀಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.

ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು; ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವರು ಕರೆ ನೀಡಿದರು.

ಜನ ಕೆಟ್ಟ ಆಡಳಿತದಿಂದ ರೋಸಿ ಹೋಗಿದ್ದಾರೆ. ತೆರಿಗೆ, ದರ ಏರಿಕೆ ಸುಳಿಗೆಯಿಂದ ಬೇಸತ್ತು ಹೋಗಿದ್ದಾರೆ. ಮುಂದೆ ನಮ್ಮ ಪಕ್ಷಕ್ಕೆ ಒಂದು ಅವಕಾಶ ಕೊಡಿ. ಐದು ವರ್ಷದಲ್ಲಿ‌ ಯಾವ ರೀತಿ ಆಡಳಿತ ಕೊಡಬೇಕು, ಜನರಿಗೆ ಏನೆಲ್ಲ ಒಳ್ಳೆಯದು ಮಾಡಬೇಕು ಎಂಬುದನ್ನು ಸಾಬೀತು ಮಾಡಿ ತೋರಿಸುತ್ತೇನೆ. ಒಂದು ವೇಳೆ ಜನ ಮೆಚ್ಚುವ ಸರ್ಕಾರ ನನ್ನಿಂದ ಕೊಡಲು ಆಗದಿದ್ದರೆ ಈ ಜನ್ಮದಲ್ಲಿ ಮತ್ತೆ ನನ್ನ ಮುಖ ತೋರಿಸಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯದ ಸಾಲ 7.50 ಲಕ್ಷ ಕೋಟಿ ದಾಟಿದೆ. ಸಿದ್ಧರಾಮಯ್ಯ ಒಬ್ಬರೇ 5ರಿಂದ 5.50 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಏನಕ್ಕೆ ಮಾಡಿದ್ರು ಇಷ್ಟು ಸಾಲವನ್ನು? ಯಾವ ಪುರುಷಾರ್ಥಕ್ಕೆ ಮಾಡಿದ್ರು ಎಂಬುದನ್ನು ಜನರಿಗೆ ಉತ್ತರ ಕೊಡಬೇಕು ಎಂದು ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ:-ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ದೇವೇಗೌಡರನ್ನು ವಂಚಿಸಿದರು!
ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಇಡೀ ಬದುಕನ್ನು ಜನರಿಗೆ ಮೀಸಲಿಟ್ಟರು. ಅವರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋದವರಲ್ಲಾ. ಈ ರಾಜ್ಯವನ್ನು ದೀರ್ಘ ಕಾಲ ಆಳಿದ ದೇವರಾಜು ಅರಸು ಅವರೇ ಕುಂಡೆ ಬಂದು ನನ್ನ ನಮ್ಮ ಜೊತೆ ಕೈ ಜೋಡಿಸು ಎಂದು ಹೇಳಿದರು ದೇವೇಗೌಡರು ಕೇಳಲಿಲ್ಲ. ಒಂದು ಆದರ್ಶ, ಮೌಲ್ಯ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಅಂತಹವರ ಮೇಲೆ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದರು. ದೇವೇಗೌಡರು ಜ್ಯೋತಿಷ್ಯರನ್ನ ನಂಬುತ್ತಾರೆ ಎಂದು ಆ ಜ್ಯೋತಿಷಿಗಳನ್ನು ಟ್ರ್ಯಾಪ್ ಮಾಡಿ ವಂಚಿಸಿದರು. ಅಲ್ಲದೆ, ಮೈಸೂರಿನಲ್ಲಿ ದೇವೇಗೌಡರು 500 ನಿವೇಶನಗಳನ್ನು ಖರೀದಿ ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ವಿರುದ್ದ ಸಿಐಡಿ, ಲೋಕಾಯುಕ್ತ ಸೇರಿ ಅನೇಕ ತನಿಖೆಗಳನ್ನು ನಡೆಸಿದರು. ಕೊನೆಗೆ ಸತ್ಯಕ್ಕೆ ಜಯವಾಯಿತು. ದೇವೇಗೌಡರು ಏನೆಂಬುದು ರಾಜ್ಯದ ಜನತೆಗೆ ತಿಳಿಯಿತು ಎಂದು ಅವರು ಹೇಳಿದರು.

ಜನರು ಹಾಗೂ ಕಾರ್ಯಕರ್ತರಿಂದ ಜೆಡಿಎಸ್ ಉಳಿದಿದೆ. ಜನತೆಗೆ ನಮ್ಮ ಕೈಲಾದಷ್ಟು ಒಳ್ಳೆಯದನ್ನು ಮಾಡಿದ್ದೇವೆ. ನಾವೇನು ಅನ್ಯಾಯ ಮಾಡಿದ್ದೇವೆ ಈ ರಾಜ್ಯಕ್ಕೆ? ದೇವೇಗೌಡರು ಏನು ಅನ್ಯಾಯ ಮಾಡಿದ್ದಾರೆ? ನಮಗೆ ಯಾಕೆ ಪೂರ್ಣ ಪ್ರಮಾಣದ ಆಶೀರ್ವಾದ ಸಿಕ್ಕಿಲ್ಲ? ಯಾವ ಸಮುದಾಯಕ್ಕೂ ನಮ್ಮ ಪಕ್ಷದಿಂದ ಅನ್ಯಾಯ ಆಗಿಲ್ಲ. ಬೇರೆ ಬೇರೆ ರಾಜ್ಯಗಳ ಜನರು ದೇವೇಗೌಡರನ್ನು ನೆನಪು ಮಾಡಿಕೊಳ್ಳುತ್ತಾರೆ. ನಮ್ಮ ರಾಜ್ಯದ ಜನತೆಗೆ ಏಕೆ ಅಂತಹ ಭಾವನೆ ಇಲ್ಲ ಎಂದು ಸಚಿವರು ಅತೀವ ಬೇಸರ ವ್ಯಕ್ತಪಡಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ದರೋಡೆ ಮಾಡ್ತಿದೆ:
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಇನ್ನು ಎಷ್ಟು ದರೋಡೆ ಮಾಡುತ್ತೀರಿ? ಎಷ್ಟೊಂದು ತೆರಿಗೆಗಳನ್ನು ಏರಿಸಿದಿರಿ? ಎಷ್ಟೊಂದು ಬೆಳೆಗಳನ್ನು ಹೆಚ್ಚಳ ಮಾಡಿದಿರಿ? ಬಿ ಖಾತಾ ಏ ಖಾತಾ ತೆರಿಗೆ ಎಂದು ದೋಖಾ ಮಾಡುತ್ತಿದೀರಿ. ಬೆಂಗಳೂರಿನಲ್ಲಿ, ರಾಜ್ಯದಲ್ಲಿ ರಸ್ತೆ ಗುಂಡಿಗೆ ಬಿದ್ದು ಎಷ್ಟೋ ಜನ ಸಾವನಪ್ಪಿದ್ದಾರೆ. ಕಬ್ಬು ಬೆಳೆಗಾರರ ಕಬ್ಬಿಗೆ ಬೆಂಕಿ ಹಾಕಿದ್ದು ಯಾರು ಅಂತಾ ಗೊತ್ತಿಲ್ಲಾ. ಈ ಪಾಪ ಸುಮ್ಮನೆ ಹೋಗಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಾನು ಎರಡು ಬಾರಿ ಸಿಎಂ ಆಗಿದ್ದರೂ ಸಂಪೂರ್ಣ ಬಹುಮತದ ಸರ್ಕಾರ ಸಿಗಲಿಲ್ಲ. ಬಿಜೆಪಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ಮಾಡಿದೆ. ೨೦ ತಿಂಗಳ ಅಧಿಕಾರವದಿಯಲ್ಲಿ ನೂರಾರು ಕಾಲೇಜು, ಆಸ್ಪತ್ರೆ ಕಟ್ಟಿದ್ದೇವೆ. ಲಾಟರಿ, ಸಾರಾಯಿ ನಿಷೇಧ ಮಾಡಿದಾಗ ಯಾವ ರೀತಿ ನನ್ನ ಮೇಲೆ ಎಷ್ಟೇ ಒತ್ತಡ ಹಾಕಿದರೂ ರಾಜ್ಯದ ಹೆಣ್ಣು ಮಕ್ಕಳಲ್ ಒಳ್ಳೆಯದಕಾಗಿ ನಾನು ಅವುಗಳನ್ನು ಬ್ಯಾನ್ ಮಾಡಿದೆ. ಆ ಕಾರಣಕ್ಕೆ ಜನರು ನನಗೆ ಶಿಕ್ಷೆ ವಿಧಿಸುತ್ತಿದ್ದಾರೆಯೇ? ಎಂದು ನೋವು ವ್ಯಕ್ತಪಡಿಸಿದರು ಕೇಂದ್ರ ಸಚಿವರು.

25ರಿಂದ 26 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 500 ರಿಂದ 1000 ಕೋಟಿ ಅನುದಾನ ಕೊಟ್ಟೆ. ಇಷ್ಟಾದರೂ ನಮಗೆ ಜನರು ಪೂರ್ಣ ಬಹುಮತ ನೀಡುತ್ತಿಲ್ಲ ಯಾಕೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜಾತಿ ಗಣತಿ ಹೆಸರಿನಲ್ಲಿ ಜನರ ವಿಭಜನೆ:
ಅಭಿವೃದ್ಧಿ ಹೆಸರಿನಲ್ಲಿ ರಾಜಕಾರಣ ಮಾಡಲು ಇವರಿಗೆ ಆಗುತ್ತಿಲ್ಲ. ಅದರಿಂದಲೇ ವಾಮಮಾರ್ಗಗಳ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿವೆ ಎಲ್ಲಿವೆ ಕಾಂತರಾಜು , ಜಯಪ್ರಕಾಶ್ ಹೆಗಡೆ, ಮದುಸೂದನ್ ನಾಯ್ಕ್ ವರದಿಗಳು? ಸ್ವಲ್ಪ ಹೇಳುತ್ತೀರಾ ಮುಖ್ಯಮಂತ್ರಿಗಳೇ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು.

ಸಿದ್ದರಾಮಯ್ಯ ಅವರು 25- 30 ವರ್ಷದಿಂದಲೂ ಅಧಿಕಾರದಲ್ಲಿಯೇ ಇದ್ದಾರೆ. ಈ ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ? ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದೀರಿ? ಬೆಂಗಳೂರು ನಗರವನ್ನು ಹೋಳು ಮಾಡಿ ಗ್ರೇಟರ್ ಬೆಂಗಳೂರು ಅಂತ ಮಾಡಿ ಐವರು ಮೇಯರ್ ಗಳನ್ನ ಮಾಡಿ ಏನ್ ಮಾಡ್ತಿರಪ್ಪ ನೀವು? ಎಂದು ಅವರು ಟೀಕಾಪ್ರಹಾರ ನಡೆಸಿದರು.

ರಾಜ್ಯದ ಜನರ ಋಣ ತೀರಿಸುವೆ:
ಕೇಂದ್ರದಲ್ಲಿ ನರೇಂದ್ರ ಮೋದಿಯವರು ನನಗೆ ಅವಕಾಶ ಕೊಟ್ಟಿದ್ದಾರೆ. ಆಂದ್ರಪ್ರದೇಶದ ವೈಜಾಕ್ ನಲ್ಲಿ ಸ್ಟೀಲ್ ಫ್ಯಾಕ್ಟರಿ ಪುನರಾರಂಭ ಮಾಡಿದ್ದೇನೆ. ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಸ್ಟೀಲ್ ಫ್ಯಾಕ್ಟರಿಯನ್ನ ಪುನಶ್ಚೇತನ ಮಾಡುವೆ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

24 mins ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

29 mins ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

30 mins ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

32 mins ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

35 mins ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

41 mins ago