Mysore
28
light rain

Social Media

ಶನಿವಾರ, 08 ಆಗಸ್ಟ್ 2026
Light
Dark

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸುವುದು ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ನಮೆಲ್ಲರ ಹೊಣೆಯಾಗಿದೆ. ಪರೀಕ್ಷೆಯ ಫಲಿತಾಂಶದಿಂದಾಗಿ ಯಾವುದೇ ವಿದ್ಯಾರ್ಥಿಯು ನಿರಾಸೆಗೊಂಡು ತನ್ನ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂಬುದು ನನ್ನ ಹಾಗೂ ಸರ್ಕಾರದ ದೃಢವಾದ ಆಶಯವಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗಬಾರದು ಎಂಬ ಸದುದ್ದೇಶದಿಂದ ಕಳೆದ ವರ್ಷದಂತೆಯೇ ಈ ಬಾರಿಯೂ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಭರಿಸಲಿದೆ. ಹೀಗಾಗಿ ವಿದ್ಯಾರ್ಥಿಗಳು ಸಂಪೂರ್ಣ ಉಚಿತವಾಗಿ ನೋಂದಾಯಿಸಿಕೊಂಡು ಪರೀಕ್ಷೆ ಹಾಜರಾಗಬಹುದು. ಇದರ ಜೊತೆಗೆ ತಾವು ಪಡೆದಿರುವ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೂ 2ನೇ ಪರೀಕ್ಷೆಗೆ ಹಾಜರಾಗಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಶೇ.94.18ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೆ? ದಾಖಲೆ ನಿರ್ಮಾಣವಾಗಿದೆ. ಈ ಪರೀಕ್ಷೆಯಲ್ಲಿ 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಂದು ವಿಷಯದಲ್ಲಿ 20,691, ಎರಡು ವಿಷಯದಲ್ಲಿ 10,509, ಮೂರು ವಿಷಯದಲ್ಲಿ 6,103, ನಾಲ್ಕು ವಿಷಯದಲ್ಲಿ 3,799, ಐದು ವಿಷಯದಲ್ಲಿ 2,552 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಎಲ್ಲಾ ವಿಷಯಗಳಲ್ಲಿ 1,716 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Tags:
error: Content is protected !!