ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಅದರ ಕುರಿತು ಪರಾಮರ್ಶಿಸಲು ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ಅಧ್ಯಕ್ಷರಾಗಿದ್ದಾರೆ. ಸಚಿವರಾದ ಎಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಸಮಿತಿಯ ಪ್ರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡುವುದಾಗಿದೆ.
ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ಔಷಧಿ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ಈ ಸಮಿತಿ ನಿರ್ಧರಿಸಲಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.





