ಬೆಂಗಳೂರು: ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಇದೇ ತಿಂಗಳು 27 ರಂದು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿದರೂರು ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣೆವೇ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ದುರಾದೃಷ್ಟವಶಾತ್ ಅವರು ಬದುಕುಳಿಯಲಿಲ್ಲ. ಸಭೆಯಲ್ಲಿ ಆರಂಭಿಸುವ ಮುನ್ನ ಕಾಂಗ್ರೆಸ್ ನಾಯಕರು ಬಿದರೂರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಬಿದರೂರು ಅವರ ನಿಧನಕ್ಕೆ ಸಂತಾಪ ಸೂಚಿಸಿದರು.
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಮಾಜಿ ಶಾಸಕರು, ಹಿರಿಯ ನಾಯಕರಾದ ಶೀಶೈಲಪ್ಪ ಬಿದರೂರು ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಇವರು ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಹಲವು ಸಮಿತಿಗಳಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದಾರೆ. ಇಂದು ಸಭೆಯಲ್ಲಿ ಭಾಗವಹಿಸಲು ಆಗಮಿಸಿದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಕೊನೆಯುಸಿರೆಳೆದಿದ್ದಾರೆ. ನಾನು, ನಮ್ಮ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಎಲ್ಲರ ಒಮ್ಮತದ ತೀರ್ಮಾನದ ಮೇರೆಗೆ ಈ ಸಭೆಯನ್ನು 27ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.
ಜೂಮ್ ಮೂಲಕ ಇದೇ 27 ರಂದು ಸಭೆ ಮಾಡಲಾಗುವುದು. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಅಭ್ಯರ್ಥಿಯಾಗಲು ಅರ್ಜಿ ಹಾಕಿರುವವರಿಗೆ ಜೂಮ್ ಸಭೆ ಲಿಂಕ್ ಕಳುಹಿಸಲಾಗುವುದು. ನಿಮಗೆ ಕೊಡಬೇಕಾದ ಮಾರ್ಗದರ್ಶನವನ್ನು ನೀವುಗಳು ಕೊಟ್ಟಿರುವ ದೂರವಾಣಿ ಸಂಖ್ಯೆಗೆ ಶೇರ್ ಮಾಡುತ್ತೇವೆ. ಮತದಾರರ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಗೆ ನೀಡಲಾಗುವುದು. ನೀವುಗಳು ನಿಮ್ಮ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ತೆಗೆದುಕೊಂಡು ಹೋಗಿ ಅವುಗಳನ್ನು ಪರಿಶೀಲಿಸಬೇಕು. ಕೈಬಿಡಲಾಗಿರುವ ಹೆಸರನ್ನು ಮತ್ತೆ ಸೇರಿಸಿಕೊಳ್ಳುವಂತೆ ಮಾಡಬೇಕು.
ನಮ್ಮ ನಾಯಕ ಬಿದರೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲ ಪ್ರಾರ್ಥಿಸೋಣ’ ಎಂದು ಹೇಳಿದರು.