ಯಾದಗಿರಿ: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದರು. ಆದರೆ ರೆಡ್ಡಿ ಅವರ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿರುವ ವೆಂಕಟರೆಡ್ಡಿ ಅವರು, 2018ರ ವಿಧಾನಸಭೆ ಚುನಾವಣೆಯಲ್ಲಿ ಯಾದಗಿರಿ ಕ್ಷೇತ್ರದ ಮೂಲಕ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ, ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಇದರ ಜೊತೆಗೆ ವೆಂಕಟರೆಡ್ಡಿ ಅವರು, ಯಾದಗಿರಿಯ ಅಧ್ಯಕ್ಷರಾಗಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದ ಜಮೀನಿನಲ್ಲಿಯೇ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇನ್ನು ಮಾಜಿ ಶಾಸಕ ವೆಂಕಟರೆಡ್ಡಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದು, ವೆಂಕಟರೆಡ್ಡಿ ಅವರು ಶಾಸಕರಾಗಿ ರಾಜಕೀಯ ಹಾಗೂ ಸಾಮಾಜಿಕವಾಗಿ ತಮ್ಮ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕುಟುಂಬಸ್ಥರಿಗೆ, ಬಂಧುಗಳಿಗೆ, ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ವೆಂಕಟರೆಡ್ಡಿಯವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನನ್ನು ಪ್ರಾರ್ಥಿಸಿದರು.