Mysore
28
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು.

ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.

ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.

ಇದಾದ‌ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ‌ ಉಂಟಾಗಿರುವ ಹಾನಿಯನ್ನು ವಿವರಿಸಿದರು.

ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು‌ ಸಚಿವ ಸತೀಶ್ ಜಾರಕಿಹೊಳಿ‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ

ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ‌ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!