Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಸರ್ಕಾರದ ಪ್ರತಿ ಸಹಿ ಮಾರಾಟಕ್ಕಿದೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್‌ ಫಿಕ್ಸ್‌ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಎರಡು ಬಾರಿ ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದರು.

ಈ ಸರ್ಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರ್ಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನಾನು ಸತ್ಯ ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ಇವತ್ತಿನ ರಾಜಕಾರಣಕ್ಕೆ ದುಡ್ಡು ಬೇಕು. ಪ್ರೀತಿ ವಿಶ್ವಾಸದಿಂದ ನಾವು ಕೆಲಸ ಮಾಡಿದಾಗ ಚುನಾವಣೆ ಸಮಯದಲ್ಲಿ ಯಾರೋ ನಾಲ್ವರು ಸಹಾಯ ಮಾಡುತ್ತಾರೆ. ಆದರೆ ಅಧಿಕಾರ ಇಟ್ಟುಕೊಂಡು ಪ್ರತಿದಿನ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ತನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟವೇ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ದಲಿತ ಶಾಸಕರ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ, ಅದಕ್ಕೆ ಸಭೆ ಮಾಡುತ್ತಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಡಿನ್ನರ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಬಗ್ಗೆ ಚರ್ಚೆ ಮಾಡುವುದಾದರೆ ಕ್ಯಾಬಿನೆಟ್ ಇರುವುದು ಯಾಕೆ? SC-ST ಇರಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ನಲ್ಲಿ ಕೂತು ಚರ್ಚೆ ಮಾಡಬೇಕಾ? ಅಥವಾ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ? ಎಂದು ಕಟುವಾಗಿ ಟೀಕಿಸಿದರು.

ಕಾಂಗ್ರೆಸ್ ನಲ್ಲಿ ಸಿಎಂ ಫೈಟ್ ವಿಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ ಅವರು; ಅದು ಅವರ ಪಕ್ಷದ ವಿಚಾರ. ಅವರ ಪಕ್ಷದ ವಿಚಾರ ಅವರು ಚರ್ಚೆ ಮಾಡಿಕೊಳ್ಳಲಿ ಬಿಡಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags:
error: Content is protected !!