Mysore
20
overcast clouds
Light
Dark

ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು : ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ ಎಂದು ಹೇಳಿದ್ದಾರೆ.

ಮುಂದೆಯೂ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದೆ. ಹಾಗಾಗಿ ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್​ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ‌ ಕೇಸ್​ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್​ಐಆರ್​​ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್​ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್​ಗಳು‌ ಜಾಸ್ತಿಯಾಗುತ್ತಿವೆ. ಆದರೆ ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ