ಬೆಳಗಾವಿ: ವಕ್ಫ್ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಡಿರುವ ಆರೋಪ ಕುರಿತು ಅಧಿವೇಶನದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಅವರು ಹಿಂದಿನ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರ ಹೆಸರು ಹೇಳಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಮಾಣಿಪ್ಪಾಡಿ ವರದಿ ನೀಡಿದ್ದರು. ನಂತರ ಉಪಲೋಕಾಯುಕ್ತ ನ್ಯಾ.ಆನಂದ್ 2016ರಲ್ಲಿ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಈ ವರದಿಯನ್ನೆಲ್ಲಾ ಮುಚ್ಚಿ ಹಾಕಿದ್ದರು ಎಂದು ಆಡಳಿತ ಪಕ್ಷದ ವಿರುದ್ಧ ಆರೋಪಿಸಿದರು.
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಬೇರೆಡೆಗೆ ತಿರುಗಿಸಲು ಈ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರಿಗೆ ಸಿಬಿಐ ಮೇಲೆ ತುಂಬಾ ವಿಶ್ವಾಸವಿದೆ ಎನ್ನುವ ಆಗಿದೆ. ಅವರಿಗೆ ಧೈರ್ಯವಿದ್ದರೆ 150 ಕೋಟಿ ರೂ. ಆಮಿಷದ ಆರೋಪದ ಜೊತೆಯಲ್ಲಿ ಅನ್ವರ್ ಮಾಣಿಪ್ಪಾಡಿ ಅನ್ವರ್ ವರದಿಯನ್ನು ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.





