ಬೆಂಗಳೂರು: ಬಿಜೆಪಿ ಎಷ್ಟೇ ಅಪಪ್ರಚಾರ ಮಾಡಿದರೂ ಜನರಿಗೆ ಗ್ಯಾರಂಟಿ ಯೋಜನೆಗಳು ನೇರವಾಗಿ ತಲುಪುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸುಳ್ಳು ಆಪಾದನೆ ಮಾಡಿದ್ದಾರೆ. ಜನ ಇದನ್ನು ನಂಬಿಲ್ಲ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಗಳನ್ನು ಗೆಲ್ಲಿಸಿದ್ದಾರೆ ಎಂದರು.
ಈ ವೇಳೆ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು, ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಗ್ಯಾರಂಟಿ ನೀಡದೇ ನಾವು 18 ಉಪಚುನಾವಣೆಗಳನ್ನು ಗೆದ್ದಿದ್ದೆವು ಎಂದು ತಿರುಗೇಟು ನೀಡಿದರು.
ಈ ವೇಳೆ ಆಪರೇಷನ್ ಕಮಲ ಮಾಡಿ 18 ಚುನಾವಣೆಗಳನ್ನು ಗೆಲ್ಲಲಾಯಿತು ಎಂದು ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದರು. ಬಿಜೆಪಿ ಯಾವ ಅವಧಿಯಲ್ಲೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ ಎಂದಾಗ ಬಿ.ವೈ.ವಿಜಯೇಂದ್ರ, ನಿಮಗೆ ಗ್ಯಾರಂಟಿಗಳ ಮೇಲೆ ಅಷ್ಟು ವಿಶ್ವಾಸವಿದ್ದರೆ ಶಿಗ್ಗಾವಿ ಉಪಚುನಾವಣೆಯಲ್ಲಿ ನಮ್ಮ ಸಮುದಾಯದವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಕಾಂಗ್ರೆಸ್ ಅನ್ನು ಗೆಲ್ಲಿಸಿ ಎಂದು ಮತಭಿಕ್ಷೆ ಬೇಡಿದ್ದೇಕೆ? ಎಂದು ಪ್ರಶ್ನಿಸಿದರು.
ಈ ವೇಳೆ ಆಡಳಿತ ಪಕ್ಷ ಹಾಗೂ ವಿಪಕ್ಷ ನಾಯಕರ ನಡುವೆ ತೀವ್ರ ಕೋಲಾಹಲ ಸೃಷ್ಟಿಯಾದ ಘಟನೆ ನಡೆಯಿತು.





