Mysore
19
overcast clouds
Light
Dark

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಸಿಬಿಐ ತನಿಖೆಗೆ: ಸಿದ್ದರಾಮಯ್ಯ

ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ?

“ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.

ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.

ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ”. ಎಂದು ಟ್ವೀಟ್‌ ಮಾಡಿದ್ದಾರೆ.

ಏನಿದು ಹಗರಣ..? : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್‌ ಮೇಲಿದೆ. ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ