Mysore
30
scattered clouds

Social Media

ಶನಿವಾರ, 30 ಮೇ 2026
Light
Dark

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಹಿತ ರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳು ಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ನೀರಾವರಿ ವಿಚಾರದಲ್ಲಿ ನ್ಯಾಯ ಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ಹೇಳಿದ್ದಾರೆ.

Tags:
error: Content is protected !!