Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

ಜೆಡಿಎಸ್ ಕೋರ್ ಕಮಿಟಿಯಲ್ಲಿ ಎಚ್.ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ

ಬೆಂಗಳೂರು : ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಹಾಗೂ ಶಾಸಕರ ಸಭೆ ನಡೆಯಿತು.

ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, ಕೋರ್ ಕಮಿಟಿ ಪುನಾರಚನೆ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಪುನಾರಚನೆ ಅಧಿಕಾರವನ್ನು ಕೇಂದ್ರ ಸಚಿವರಿಗೆ ನೀಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು ಮಾಧ್ಯಮಗಳಿಗೆ ತಿಳಿಸಿದರು.

ಅಲ್ಲದೆ, ಮುಂಬರುವ 2026ರಲ್ಲಿ ವಿಧಾನ ಪರಿಷತ್ ಗೆ ನಡೆಯಲಿರುವ ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ಉಸ್ತುವಾರಿ ಸಮಿತಿ ರಚನೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ವಿವೇಕಾನಂದ, ಎಸ್.ಎನ್. ಮಂಜೇಗೌಡ, ಮಾಜಿ ಶಾಸಕ ಶಿವಶಂಕರ್ ಈ ಸಮಿತಿ ಸದಸ್ಯರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಇದನ್ನು ಓದಿ: ಅವರವರ ಭಾವಕ್ಕೆ, ಅವರವರ ಭಕ್ತಿಗೆ, ಅವರವರ ಶಕ್ತಿಗೆ, ಅವರವರ ಸಾಹಸಕೆ… 

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಂಬರುವ ಚುನಾವಣೆಗೆ ಸಂಬಂಧಿಸಿ ಉಸ್ತುವಾರಿ ಸಮಿತಿ ರಚಿಸಲಾಯಿತು. ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ. ಜವರಾಯಿ ಗೌಡ ಅವರು ಈ ಸಮಿತಿ ಸದಸ್ಯರಾಗಿರುತ್ತಾರೆ.

ಹಾಗೆಯೇ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಸಲು ಸಭೆ ನಿರ್ಧರಿಸಿದ್ದು, ಆ ಬಗ್ಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ನವೆಂಬರ್ 22ರಂದು ಜೆಡಿಎಸ್ ಪಕ್ಷ ಸ್ಥಾಪನೆಯಾಗಿ 25 ವರ್ಷ ತುಂಬಲಿದ್ದು, ಪಕ್ಷದ ಬೆಳ್ಳಿಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರವನ್ನು ಸಭೆ ಕೈಗೊಂಡಿತು ಎಂದು ಸುರೇಶ್ ಬಾಬು ಮಾಹಿತಿ ನೀಡಿದರು.

ಇದರ ಜತೆಗೆ, ರಾಜ್ಯ ಸರಕಾರ ಎಸಗುತ್ತಿರುವ ತಪ್ಪುಗಳು, ಬೆಂಗಳೂರಿನ ಗುಂಡಿಗಳ ಸಮಸ್ಯೆ, ಎ ಖಾತಾ ನೆಪದಲ್ಲಿ ಜನರ ಸುಲಿಗೆ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು, ಬಿಡದಿಯಲ್ಲಿ ರೈತರ ವಿರೋಧದ ನಡುವೆ ನಡೆದಿರುವ ಭೂಸ್ವಾಧೀನ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.

ಹಿರಿಯ ಶಾಸಕರು ಆಗಿರುವ ಎ. ಮಂಜು, ಲೋಕಸಭೆ ಸದಸ್ಯ ಮಲ್ಲೇಶ್ ಬಾಬು, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಇಂಚರ ನಾರಾಯಣಸ್ವಾಮಿ ಮುಂತಾದವರು ಸುರೇಶ್ ಬಾಬು ಅವರ ಜತೆಯಲ್ಲಿ ಇದ್ದರು.

Tags:
error: Content is protected !!