ಬೆಂಗಳೂರು: ಮಂಡ್ಯ ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಇದರಿಂದ ನನಗೆ ಬಹಳ ನೋವುಂಟಾಗಿದೆ. ಮೃತ ವಿದ್ಯಾರ್ಥಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮತ್ತೆ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಬಗ್ಗೆ ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕೆಂದು ಸೂಚಿದ್ದೇನೆ. ಅಲ್ಲದೇ ಬೇಸಿಗೆ ಕಾಲವಾದ್ದರಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರ ಹಾಗೂ ಕುಡಿಯುವ ನೀರಿನ ಬಗ್ಗೆ ಇನ್ನೂ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.





