ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲಾ ಕಾರ್ಖಾನೆ ಮತ್ತು ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ, ಕರ್ನಾಟಕಕ್ಕೆ ಇಂತಹದ್ದು ಬೇಕು ಎಂದು ರಾಜ್ಯದಿಂದ ಯಾರೊಬ್ಬರೂ ನನ್ನ ಮುಂದೆ ಬಂದು ಚರ್ಚೆ ಮಾಡಿಲ್ಲ ಎಂದರು.
ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಮೊದಲ ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸಲು. 2011ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರವೇ ಒಪ್ಪಿಗೆ ನೀಡಿದ್ದು, ಸಂಡೂರಿನ ದೇವದಾರಿ ಗಣಿ ಯೋಜನೆ ಅನುಷ್ಠಾನಕ್ಕೆ ಹಣಕಾಸು ನೆರವು ಪಡೆಯಲು ಅನುಮತಿ ಕೊಡುವ ಬಗ್ಗೆ ನಾನು ಹಣಕಾಸು ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದೆ. ಅದನ್ನೇ ತಿರುಚಿ ಹೇಳಿದ ಕಾಂಗ್ರೆಸ್ ನಾಯಕರು, ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ನನ್ನ ಒಳ್ಳೆಯ ಪ್ರಯತ್ನಕ್ಕೆ ವ್ಯವಸ್ಥಿತವಾಗಿ ಅಡ್ಡಿಪಡಿಸಿದರು. ಅಲ್ಲದೇ ಕುದುರೆಮುಖ ಕಂಪೆನಿ ಮತ್ತು ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಸರ್ಕಾರ ಏನೇನು ಷಡ್ಯಂತ್ರ ಮಾಡಬೇಕೋ ಎಲ್ಲವನ್ನೂ ಮಾಡಿದ್ದಾರೆ ಎಂದು ಆರೋಪಿಸಿದರು.
ದೇವದಾರಿ ಗಣಿ ಯೋಜನೆಗೆ ರಾಜ್ಯ ಸರಕಾರ ಅಡ್ಡಿಪಡಿಸಿದ ಕಾರಣದಿಂದ ಮಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ ಮತ್ತು ಕಾರ್ಖಾನೆಯಲ್ಲಿ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡರು. ಅವರೆಲ್ಲರೂ ನನ್ನಲ್ಲಿ ಬಂದು ದುಃಖ ತೋಡಿಕೊಂಡರು. ನನ್ನ ರಾಜ್ಯದ ಪ್ರತಿಷ್ಠಿತ ಕಾರ್ಖಾನೆಗೆ ಬೀಗ ಬೀಳಬಾರದು ಎಂಬ ಸದುದ್ದೇಶದಿಂದ ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC) ದಲ್ಲಿ ವಿಲೀನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ರಾಜಕೀಯ ಪ್ರತಿಷ್ಠೆಯಿಂದ ಕೈಗಾರಿಕೆಗಳ ಕತ್ತು ಹಿಸುಕಲು ಪ್ರಯತ್ನ ಮಾಡುತ್ತಿದ್ದರೆ, ಅವುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅವುಗಳಿಗೆ ಜೀವ ಕೊಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಎಚ್ಎಂಟಿ ವಿಷಯದಲ್ಲಿಯೂ ಅಡ್ಡಿ
ಎಚ್ಎಂಟಿಗೆ ಜೀವ ನೀಡಲು ನಾನು ಹೊರಟರೆ ಅದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಕ್ಕೆ ಹಾಕುತ್ತಿದೆ. ಅಲ್ಲದೇ ಇದು ಅರಣ್ಯ ಇಲಾಖೆ ಭೂಮಿ ಎಂದು ಕಿತಾಪತಿ ಶುರು ಮಾಡಿದೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ, ಕೇವಲ ರಾಜಕೀಯ ಬೇಕಷ್ಟೇ. ಜನತೆಗೆ ಶಾಶ್ವತವಾಗಿ ಬದುಕು ರೂಪಿಸಿ ಕೊಡುವ ಉದ್ದೇಶ ಇಲ್ಲ. ಕೇವಲ ಚುನಾವಣೆ ರಾಜಕೀಯಕ್ಕಾಗಿ ಶಾಶ್ವತ ಅಭಿವೃದ್ಧಿಯನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಮುಂದೆ ಏನನ್ನೂ ಚರ್ಚೆ ಮಾಡದೇ ಬಜೆಟ್ನಲ್ಲಿ ಏನನ್ನು ಕೊಟ್ಟಿಲ್ಲ ಎಂದು ಈಗ ಹುಯಿಲೆಬ್ಬಿಸಿದರೆ ಉಪಯೋಗವೇನು? ಪ್ರಸ್ತಾವನೆಗಳನ್ನು ತಂದು ಕೊಡುವುದು ಬಿಟ್ಟು ಪ್ರಧಾನಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದರೆ ಹೇಗೆ? ನನಗೆ ಕನ್ನಡಿಗರು ಕೊಟ್ಟಿರುವ ಶಕ್ತಿಯಿಂದಲೇ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಉಳಿಸಲು ಸಾಧ್ಯವಾಯಿತು. ಅದಕ್ಕೆ ಪ್ರಧಾನಿ ಮೋದಿ ಅವರು ಕೊಟ್ಟ ಸಹಕಾರವನ್ನು ನಾನೆಂದೂ ಮರೆಯಲಾರೆ ಎಂದು ಹೇಳಿದರು.
ಮೊನ್ನೆ ನಾನು ಅಲ್ಲಿಗೆ ಹೋದಾಗ ವಿಮಾನ ನಿಲ್ದಾಣದಿಂದ 14 ಕಿ.ಮೀ. ದೂರ ಮೆರವಣಿಗೆ ಮಾಡಿದರು ಅಲ್ಲಿನ ಜನ. ಅವರು ತೋರಿದ ಪ್ರೀತಿ, ವಿಶ್ವಾಸವನ್ನು ಎಲ್ಲಾ ಕನ್ನಡಿಗರೂ ಸಮರ್ಪಣೆ ಮಾಡುತ್ತೇನೆ. ಅವರು ಕೊಟ್ಟ ಶಕ್ತಿಯಿಂದಲೇ ಇದೆಲ್ಲಾ ಆಗಿದೆ ಎಂದು ಅವರು ಹೇಳಿದರು.
ಭದ್ರಾವತಿ ಕಾರ್ಖಾನೆಗೂ ಮರುಜೀವ
ಇದೇ ಹುರುಪಿನಲ್ಲಿ ಭದ್ರಾವತಿಯಲ್ಲಿ ಮೈಸೂರು ಮಹಾರಾಜರು ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರು ಕಟ್ಟಿರುವ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ. ಅದಕ್ಕೆ ಈ ಕಾಂಗ್ರೆಸ್ ಸರ್ಕಾರ ಎಷ್ಟರಮಟ್ಟಿಗೆ ನನಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ. ಈಚೆಗೆ ಜಾರ್ಖಂಡ್ ರಾಜ್ಯದ ಬೋಕಾರೋ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ್ದೆ. ಅಲ್ಲಿ ವಿಸ್ತರಣಾ ಯೋಜನೆಗೆ 20,000 ಕೋಟಿ ರೂ.ಹೂಡಿಕೆ ಮಾಡುತ್ತಿದ್ದೇವೆ. ಬೇರೆ ರಾಜ್ಯ ರಾಜ್ಯಗಳಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಹೋದರೆ ಅಲ್ಲಿನ ನಾಯಕರು ಪಕ್ಷಾತೀತವಾಗಿ ಸಹಕಾರ ಕೊಡುತ್ತಾರೆ. ನಮ್ಮವರಿಗೆ ಏನಾಗಿದೆ? ಕುಮಾರಸ್ವಾಮಿ ಕರ್ನಾಟಕಕ್ಕೆ ಬರುತ್ತಾನೆ ಎಂದರೆ ಇವರಿಗೆ ಹೊಟ್ಟೆನೋವು ಆಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.