ಹಾಸನ: ಕೇಂದ್ರ ಬಜೆಟ್ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ಏನು ಮಾಡಿದೆ ಎಂಬುದು
ಗೊತ್ತಿದೆ. ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡುವುದಕ್ಕೆ ಕಾಂಗ್ರೆಸ್ನವರಿಗೆ ಏನು ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ವಿಕಸಿತ ಭಾರತದ ಸಾಕಾರಕ್ಕೆ ಸಮಗ್ರ ಆಯವ್ಯಯವನ್ನು ಮಂಡಿಸಿದ್ದು, ದೇಶದ ಎಲ್ಲಾ ರಾಜ್ಯಗಳಿಗೂ ಆದ್ಯತೆ ನೀಡಿದ್ದಾರೆ. ಅಲ್ಲದೇ ಪ್ರತಿಯೊಂದು ಜಿಲ್ಲೆ ಮತ್ತು ರಾಜ್ಯಕ್ಕೆ ಕಾರ್ಯಕ್ರಮಗಳನ್ನು ಘೋಷಣೆ ಮಾಡುವ ಬದಲು ಸಮಗ್ರ ಭಾರತವನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಈ ಬಾರಿಯ ಬಜೆಟ್ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳು ಎಲ್ಲಾ ರಾಜ್ಯಗಳ ಮತ್ತು ಜಿಲ್ಲೆಗಳ ಸಾರ್ವಜನಿಕರಿಗೂ ಮುಟ್ಟುತ್ತವೆ ಎಂದು ಹೇಳಿದರು.
ಮುಂದಿನ ತಿಂಗಳು(ಮಾರ್ಚ್) ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರದವರು ರಾಜ್ಯ ಬಜೆಟ್ ಮಂಡನೆ ಮಾಡುತ್ತಾರೆ. ಆಗ ನೋಡೋಣ ಅವರು ಎಷ್ಟು ಜಿಲ್ಲೆಗಳಿಗೆ, ಯಾವ್ಯಾವ ತಾಲ್ಲೂಕುಗಳಿಗೆ ಏನೇನು ಕೊಡುಗೆ ನೀಡುತ್ತಾರೆ ಎಂಬುದು ತಿಳಿಯುತ್ತದೆ ಎಂದು ಕಿಡಿಕಾರಿದರು.
ನಾನು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು, 1983ರವರೆಗೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಅಧಿಕಾರದಲ್ಲಿತ್ತು. ಆ ವೇಳೆ ಹಾರಂಗಿ, ಹೇಮಾವತಿ, ವಾಟೆಹೊಳೆ, ಕಬಿನಿ ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರದಿಂದ ನಯಾಪೈಸೆ ಹಣ ನೀಡಿಲ್ಲ. ಐವತ್ತು ವರ್ಷ ದೇಶ ಆಳಿ ಈ ಯೋಜನೆಗಳಿಗೆ ಹಣ ನೀಡಿದ್ದಾರಾ? ಎಂದು ಪ್ರಶ್ನಿಸಿದರು.
ಎಚ್.ಡಿ.ದೇವೇಗೌಡರು ಪ್ರಧಾನಮಂತ್ರಿ ಆಗಿದ್ದಾಗ ಆಕ್ಸಿಲರೇಟೆಡ್ ಇರಿಗೇಷನ್ ಸ್ಕೀಂ ಅನ್ನು ಇಡೀ ದೇಶದಲ್ಲಿ ಜಾರಿಗೆ ತಂದರು. ಆಗ ಉತ್ತರ ಕರ್ನಾಟಕಕ್ಕೆ 15ರಿಂದ 20 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದರು. ಆದರೆ ಕಾಂಗ್ರೆಸ್ ಅವರು ಏನು ಕೊಡುಗೆ ನೀಡಿದ್ದಾರೆ? ಮೈಸೂರು ಮಹಾರಾಜರು, ಸರ್ ಎಂ.ವಿಶ್ವೇಶ್ವರಯ್ಯ ಅವರು ಕಟ್ಟಿದ್ದ ಕೆಆರ್ಎಸ್ನಿಂದ ಹಾಗೂ ದೇವೇಗೌಡರ ಹೋರಾಟದ ಫಲವಾಗಿ ನಿರ್ಮಾಣವಾದ ಹಾರಂಗಿ, ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಟ್ಟುಕೊಂಡು ಕೂತಿದ್ದಾರೆ ಎಂದು ಟೀಕಿಸಿದರು.
ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಕೇಂದ್ರದಲ್ಲಿ ಮಂತ್ರಿಗಳಾಗಿದ್ದಾರೆ. ಪ್ರಧಾನಮಂತ್ರಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದು ಹೇಳುತ್ತಾರೆ. ನಾನು ಎರಡು ಇಲಾಖೆಗಳ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ನೆರೆಯ ಆಂಧ್ರ ಪ್ರದೇಶದಲ್ಲಿ ವೈಜಾಗ್ ಸ್ಟೀಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕೇಂದ್ರ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಒಮ್ಮೆ ಸಂಪುಟದಲ್ಲಿ ಕೈಗೊಂಡ ನಿರ್ಧಾರವನ್ನು ಮತ್ತು ಪರಿಶೀಲನೆ ಮಾಡಿದ ಉದಾಹರಣೆ ಇಲ್ಲ. ಸಾಮಾನ್ಯವಾಗಿ ಮಾಡುವುದೂ ಇಲ್ಲ. ನಾನು ಮಂತ್ರಿಯಾದ ಮೇಲೆ ಆ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಖುದ್ದು ಅವಲೋಕನ ಮಾಡಿದೆ. ನಂತರ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ, ಆರ್ಥಿಕ ಸಚಿವರ ಮನವೊಲಿಸಿ ಆ ಕಾರ್ಖಾನೆಗೆ ಜೀವ ಕೊಟ್ಟಿದ್ದೇನೆ. ಉಕ್ಕು ಕ್ಷೇತ್ರದಲ್ಲಿ ಆ ಕಾರ್ಖಾನೆಯನ್ನು ನಂಬರ್ ಒನ್ ಸ್ಥಾನಕ್ಕೆ ತರುತ್ತೇವೆ. ನನ್ನ ಬಗ್ಗೆ ಲಘುವಾಗಿ ಮಾತನಾಡುವ ಕಾಂಗ್ರೆಸ್ ನಾಯಕರು ವಿಶಾಖಪಟ್ಟಣಕ್ಕೆ ಹೋಗಿ ನೋಡಲಿ ಎಂದು ತರಾಟೆಗೆ ತೆಗೆದುಕೊಂಡರು.
ನರೇಂದ್ರಮೋದಿಯವರು ಯಾವಾಗಲೂ ವಿಕಸಿತ, ಆತ್ಮನಿರ್ಭರ ಭಾರತ ಬಗ್ಗೆ ಹೇಳುತ್ತಾರೆ. ಸ್ವಾತಂತ್ರ್ಯ ಶತಮಾನೋತ್ಸವ ಆಚರಣೆ ಮಾಡುವುದರೊಳಗೆ ನಮ್ಮ ದೇಶ ವಿಶ್ವದಲ್ಲಿ ಅಗ್ರ ಸ್ಥಾನಕ್ಕೆರಬೇಕು. ಅದಕ್ಕೆ ಅನೇಕ ಕಾರ್ಯಕ್ರಮಗಳನ್ನು ತರಲು ಮೋದಿಯವರ ಪ್ರಯತ್ನಗಳು ನಡೆದಿವೆ. ಅವರು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ವಿಶೇಷವಾಗಿ ನಾಲ್ಕು ಕ್ಷೇತ್ರಗಳಿಗೆ ಉತ್ತೇಜನ ನೀಡಿದ್ದಾರೆ. ಬಡತನ, ನಿರುದ್ಯೋಗ, ರೈತರ ಸಮಸ್ಯೆ, ಮಹಿಳೆಯರು ಸ್ವಾವಲಂಬಿಯಾಗಿ ಬರಲು ಆರ್ಥಿಕ ಶಕ್ತಿ ತುಂಬಲು ಬಜೆಟ್ನಲ್ಲಿ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.