ರಾಜ್ಯ

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ : ಮಾಜಿ ಪ್ರಧಾನಿ ದೇವೇಗೌಡ ಗುಡುಗು

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು.

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮ ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಭಾನುವಾರ ನಡೆಯಿತು.

ಕುಮಾರಸ್ವಾಮಿ ಅವರಿಗೆ ಕೆಲವರು ಬಹಳ ಯಾತನೆ ಕೊಡುತ್ತಿದ್ದಾರೆ. ಅವರ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಸುಖಾ ಸುಮ್ಮನೆ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಆರೋಪಗಳನ್ನು ಸಾಬೀತು ಮಾಡಲು ಅವರಿಂದ ಆಗಿಲ್ಲ, ಆಗುವುದೂ ಇಲ್ಲ. ಕೇವಲ ಆರೋಪ ಮಾಡಿಕೊಂಡೇ ಅವರೆಲ್ಲ ಸೋಲುತ್ತಿದ್ದಾರೆ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರನ್ನು ಕೆಲವರಿಗೆ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಅವರ ವ್ಯಕ್ತಿತ್ವ, ಜನಪ್ರಿಯತೆಯನ್ನು ಜೀರ್ಣಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರು ರೈತರ ಸಾಲ ಮನ್ನಾ ಮಾಡಿದಂತೆ ದೇಶದಲ್ಲಿ ಯಾರೂ ಸಾಲ ಮನ್ನಾ ಮಾಡಿದ್ದನ್ನು ನಾನು ನೋಡಿಲ್ಲ ಎಂದು ದೇವೇಗೌಡರು ನುಡಿದರು.

ಸೋಲಿಗೆ ಎದೆಗುಂದುವ ಪ್ರಶ್ನೆ ಇಲ್ಲ
ದೇವೇಗೌಡರ ನಂತರ ಜೆಡಿಎಸ್ ಉಳಿಯಲ್ಲ ಎಂದು ಕೆಲವರ ಕುಹಕ ಮಾತುಗಳಿಗೆ ಖಡಕ್‌ ತಿರುಗೇಟು ಕೊಟ್ಟ ಅವರು, ಸೋಲು ಗೆಲುವಿಗೆ ಬುನಾದಿ ಆಗುತ್ತದೆ ಎಂಬುದನ್ನು ಮರೆಯಬಾರದು. ಸೋಲಾಯಿತು ಎಂದು ಎದೆಗುಂದಬಾರದು. ನನಗೆ ಇಷ್ಟು ವರ್ಷದ ಮೇಲೆ ಕಾಲಿನ ತೊಂದರೆ ಬಂದಿದೆಯೇ ಹೊರತು, ಬುದ್ಧಿಗೆ ತೊಂದರೆ ಇಲ್ಲ. ಅದಕ್ಕೆ ನಡೆಯಲು ಕಷ್ಟವಾಗುತ್ತಿದೆ. ನನಗೆ ಮರೆವು ಇನ್ನೂ ಬಂದಿಲ್ಲ ಎಂದು ವಿರೋಧಿಗಳಿಗೆ ಟಾಂಗ್‌ ಕೊಟ್ಟರು.

ಯಾರೇ ನನ್ನ ಬಳಿಗೆ ಬಂದರೂ ತಿರಸ್ಕಾರ ಮನೋಭಾವದಿಂದ ನೋಡಿಲ್ಲ. ನೋಡುವುದೂ ಇಲ್ಲ. ಯಾವಾಗ ಯಾರು ಬೇಕಾದರೂ ಬರಬಹುದು, ಎಲ್ಲಿಗೆ ಬೇಕಾದರೂ ನನ್ನನ್ನು ಕರೆಯಿರಿ, ಬರುತ್ತೇನೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ೩೨ ಕಡೆ ಬಹಿರಂಗ ಸಭೆ ಮಾಡಿದ್ದೇನೆ. ಆದರೆ ಜನರು ಯಾಕೆ ನಮ್ಮನ್ನು ಕೈ ಬಿಟ್ಟರು, ಹೇಗೆ ಸೋತೆವು? ಎಂದು ನಾನು ಹೇಳಲು ಹೋಗುವುದಿಲ್ಲ. ಈ ಒಂದು ಸೋಲು ನಮ್ಮನ್ನು ಎದೆಗುಂದಿಸಲು ಸಾಧ್ಯವಿಲ್ಲ. ಎದೆಗುಂದು ಪ್ರಶ್ನೆಯೂ ಇಲ್ಲ. ಮತ್ತೆ ಪುಟಿದೆದ್ದು ಬರುತ್ತೇವೆ. ಆ ಶಕ್ತಿ ನಮ್ಮ ಪಕ್ಷಕ್ಕಿದೆ ಎಂದು ಮಾಜಿ ಪ್ರಧಾನಿಗಳು ವಿಶ್ವಾಸದಿಂದ ನುಡಿದರು.

ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ
ಮೊರಾರ್ಜಿ ದೇಸಾಯಿ ಅವರು ನನಗೆ ಪಕ್ಷವನ್ನು ಕೊಟ್ಟರು. ಜನತಾದಳ ಎಷ್ಟೇ ಭಾಗ ಆದರೂ ಈ ಪಕ್ಷ ಇನ್ನೂ ಉಳಿದಿದೆ. ನಾನು ಹೋದ ಮೇಲೆಯೂ ಪಕ್ಷ ಉಳಿಯುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ, ಈ ಪಕ್ಷವನ್ನು ಮುಗಿಸುತ್ತೇನೆ ಎನ್ನುವ ಮಹಾನುಭಾವ ಎಂದಿಗೂ ಹುಟ್ಟಲು ಸಾಧ್ಯವಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೆಡಿಎಸ್‌ ಒಂದು ಕುಟುಂಬದ ಪಕ್ಷವಲ್ಲ
ಜೆಡಿಎಸ್‌ ಕುಟುಂಬದ ಪಕ್ಷ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಒಂದು ಕುಟುಂಬದ ಪಕ್ಷವಲ್ಲ. ಇದು ಕಾರ್ಯಕರ್ತರ ಪಕ್ಷ. ಎಷ್ಟೋ ಮಹಾನುಭಾವರು ಈ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಹೋಗಿದ್ದಾರೆ, ಇನ್ನೂ ಅನುಭವಿಸುತ್ತಿದ್ದಾರೆ, ಎಲ್ಲಾ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಆದರೆ ಪಕ್ಷ ಮಾತ್ರ ಹಾಗೆಯೇ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಇನ್ನೂ ಸದೃಢವಾಗಿ ಬದುಕಿದೆ. ಇದು ಹೇಗೆ ಎಂಬ ಪ್ರಶ್ನೆಯನ್ನು ಟೀಕೆ ಮಾಡುವವರು ಕೇಳಿಕೊಳ್ಳಬೇಕು ಎಂದು ಮಾಜಿ ಪ್ರಧಾನಿಗಳು ತಿರುಗೇಟು ನೀಡಿದರು.

ನಮಗೆ ಕೂರಲಿಕ್ಕೆ ಜಾಗ ಇಲ್ಲ ಎಂದು ಹೊರಕ್ಕೆ ದೂಡಿದರು. ಇವತ್ತು ಈ ಜಾಗದಲ್ಲಿ ಭವ್ಯ ಕಚೇರಿ ನಿಮಗೆಲ್ಲರಿಗೂ ಕಾಣುತ್ತಿದೆ. ಈ ಜಾಗವನ್ನು ಪಕ್ಷಕ್ಕೆ ಕೊಟ್ಟವರು ಒಬ್ಬ ಕುರುಬರ ಹೆಣ್ಣು ಮಗಳು. ಆಕೆ ಮೇಯರ್ ಆಗಿದ್ದಳು. ಅಣ್ಣಾ.. ನಿಮ್ಮ ನೋವನ್ನು ನೋಡಲು ಆಗುತ್ತಿಲ್ಲ ಎಂದು ಈ ಜಾಗವನ್ನು ನಮಗೆ ಕೊಟ್ಟಳು. ಆಕೆ ಪುಣ್ಯಾತ್ಮಳು. ಆಮೇಲೆ ಎಲ್ಲರೂ ಸೇರಿ ಈ ಕಟ್ಟಡ ಕಟ್ಟಿದ್ದೇವೆ. ಇಡೀ ದೇಶದಲ್ಲಿಯೇ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಹೆಸರಲ್ಲಿ ಕಚೇರಿ ತೆರೆದಿದ್ದೇವೆ. ನಮ್ಮನ್ನು ಟೀಕೆ ಮಾಡುವ ನೈತಿಕತೆ ಇವರಿಗೆ ಇದೆಯಾ? ಕುಟುಂಬಕ್ಕೆ ಸಂಬಂಧಿಸಿದ ಪಕ್ಷ ಅಂತಾರೆ, ನೋ.. ನೋ…ನೋ.. ನಮ್ಮ ಪಕ್ಷ ಯಾವ ಕುಟುಂಬಕ್ಕೂ ಸೇರಿದ್ದಲ್ಲ. ಯಾವುದೋ ಮನೆತನಕ್ಕೂ ಸೇರಿದ್ದಲ್ಲ ಎಂದು ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು.

ವೈಜಾಗ್ ಉಕ್ಕು ಕಾರ್ಖಾನೆಯನ್ನು ಕುಮಾರಸ್ವಾಮಿ ಅವರು ಮೋದಿ ಅವರ ಮಾರ್ಗದರ್ಶನದಲ್ಲಿ ಪುನಶ್ಚೇತನ ಮಾಡಿದ್ದಾರೆ. ಈಗ ಅದು ಲಾಭದಲ್ಲಿ ನಡೆಯುತ್ತಿದೆ. ಅದಕ್ಕೆ ಆ ರಾಜ್ಯದ ಸಿಎಂ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಸಹಕಾರ ನೀಡಿದ್ದಾರೆ. ಆದರೆ, ನಮ್ಮ ರಾಜ್ಯದಲ್ಲಿ ಹೀಗೆ ಏಕೆ ಆಗುತ್ತಿಲ್ಲ? ಸಹಕಾರ ನೀಡಿದರೆ ಹೆಚ್ಎಂಟಿ, ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ, ಭದ್ರಾವತಿಯ ಸರ್‌ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಅದಿರು ಮತ್ತು ಉಕ್ಕು ಕಾರ್ಖಾನೆಯನ್ನು ಉಳಿಸಬಹುದು. ಕುಮಾರಸ್ವಾಮಿ ಅವರಿಗೆ ಕೆಲಸ ಮಾಡುವ ಉತ್ಸಾಹ, ಶ್ರದ್ಧೆ ಇದೆ. ಕಾಂಗ್ರೆಸ್ ಸರಕಾರ ಕುಮಾರಸ್ವಾಮಿ ಅವರಿಗೆ ಸಹಕಾರ ನೀಡಬೇಕು. ಸಹಕಾರ ಕೊಟ್ಟರೆ ಮೇಲೆ ನಾನು ಹೇಳಿದ ಎಲ್ಲಾ ಕಾರ್ಖಾನೆಗಳು ಮತ್ತೆ ಜೀವ ಪಡೆಯುತ್ತವೆ. ನಮಗೆ ಸವಾಲುಗಳು ಇವೆ. ರಾಜ್ಯದ ಅನೇಕ ನೀರಾವರಿ ಸಮಸ್ಯೆಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅದಕ್ಕಾಗಿ ನಾವು ಶ್ರಮಿಸಬೇಕಿದೆ ಎಂದು ದೇವೇಗೌಡರು ಒತ್ತಿ ಹೇಳಿದರು.

ನಿಖಿಲ್‌ ಕುಮಾರಸ್ವಾಮಿ ಒಳ್ಳೇ ಕೆಲಸ ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಮಾಡುವುದು ಅಗತ್ಯದ ಕೆಲಸ. ಅವರ ಪ್ರವಾಸ ವೇಳಾಪಟ್ಟಿಯನ್ನು ಗಮನಿಸಿದ್ದೇನೆ. ಉತ್ತಮ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡು ಹೊರಟಿದ್ದಾರೆ. ಅವರಿಗೆ ಎಲ್ಲರೂ ಸಹಕಾರ ಕೊಟ್ಟು ಕೆಲಸ ಮಾಡಬೇಕು. ಬೆಂಗಳೂರು ನಗರದಲ್ಲಿ ಮುಂದೆ ಬಿಬಿಎಂಪಿ ಚುನಾವಣೆಯಲ್ಲಿ ನಾವು ಐವತ್ತು ಸ್ಥಾನ ಗೆಲ್ಲಬೇಕು. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

11 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

11 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

11 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

12 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

12 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

13 hours ago