ರಾಜ್ಯ

ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್ ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಂಡ್ಯ ಲೋಕಸಭೆ ಫಲಿತಾಂಶದ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದರು.

ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರೂ ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ, ಬಿಡುವುದೂ ಇಲ್ಲ ಎಂದು ಕುಮಾರಸ್ವಾಮಿ ಅವರು ಭಾವುಕರಾಗಿ ಹೇಳಿದರು.

ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಅಲ್ಲಿಯೂ ನಮ್ಮ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಜಯ ಗಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು.

ಜನರು ನಮ್ಮನ್ನು ಆಶೀರ್ವದಿಸಿದ್ದಾರೆ. ಅವರು ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ನಾಡಿನ ಅಭಿವೃದ್ಧಿಗಾಗಿ ಮೋದಿ ಅವರ ಜತೆಗೂಡಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಜನರು ಮನ್ನಣೆ ನೀಡಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವಿರತವಾಗಿ ಕೆಲಸ ಮಾಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಮತದಾರರಿಗೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿಯವರು ಕಳೆದ ಎರಡೂವರೆ ತಿಂಗಳು ಶ್ರಮವಹಿಸಿ ಗೆಲುವಿಗೆ ಶ್ರಮಿಸಿದ್ದಾರೆ. ಇಡೀ ದೇಶವನ್ನು ಸುತ್ತಿದ್ದಾರೆ. ಎನ್ ಡಿಎ ಸಾಧನೆಯಲ್ಲಿ ಅವರ ಪಾತ್ರ ದೊಡ್ಡದು ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಎಕ್ಸಿಟ್ ಪೋಲ್ ನಲ್ಲಿ ಬಂದ ಸಮೀಕ್ಷೆಗಳು ಸ್ಪಲ್ಪ ಏರುಪೇರಾಗಿದೆ. ಕಾಂಗ್ರೆಸ್ ನ ಅಪಪ್ರಚಾರ ಇದಕ್ಕೆ ಕಾರಣ. ಕಾಣದ ಕೈಗಳ ಕುತಂತ್ರ ಕೂಡ ಕೆಲಸ ಮಾಡಿದೆ. ಗೆಲುವಿನ ಸಂಖ್ಯೆ ಕಡಿಮೆ ಆಗಲು ಕೆಲವು ಶಕ್ತಿಗಳು ಕೆಲಸ ಮಾಡಿವೆ. ಈ ಬಗ್ಗೆ ಯಾರನ್ನೂ ದೂರಲು ಹೋಗಲ್ಲ ಎಂದು ಅವರು ಹೇಳಿದರು.

ನಾನು ನೂರಾ ಮೂವತ್ತಾರು ಸ್ಥಾನ ಗೆದ್ದಿದ್ದೀನಿ. ಜೆಡಿಎಸ್ ಕೇವಲ ಹತ್ತೊಂಬತ್ತು ಸ್ಥಾನ ಮಾತ್ರ ಗೆದ್ದಿದೆ ಎಂಬ ದುರಂಹಕಾರದ ಮಾತುಗಳನ್ನು ಆಡಿದ್ದರು ಒಬ್ಬರು. ಅದಕ್ಕೆ ಉತ್ತರವಾಗಿ ಈ ಫಲಿತಾಂಶ ಬಂದಿದೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಕ್ಷೇತ್ರಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮೈತ್ರಿಕೂಟದ ಪರವಾಗಿ ಮತ ಹಾಕಿರುವ ಪ್ರತಿಯೊಬ್ಬರಿಗೂ ವಂದಿಸುತ್ತೇನೆ ಎಂದರು.

ಎಲ್ಲಾ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಹಣದ ಹೊಳೆ ಹರಿಸಿದರು. ಅದರಿಂದ ಕೆಲ ಕ್ಷೇತ್ರಗಳಲ್ಲಿ ನಮಗೆ ಹಿನ್ನೆಡೆ ಆಗಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ಸಿಗೆ ಇಷ್ಟು ಸ್ಥಾನ ಬಂದಿದೆ ಎಂದು ನಾನಂತು ಹೇಳಲ್ಲ. ನಮ್ಮ ಮೈತ್ರಿಯನ್ನು ಜನ ಒಪ್ಪಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

20 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago