ಬೆಂಗಳೂರು: ಏಪ್ರಿಲ್ 2 ಕ್ಕೆ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಎಚ್.ಡಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಈ ಭೇಟಿ ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮಂಗಳವಾರ ಬೆಳಗ್ಗೆ ಅಮಿತ್ ಶಾ ಅವರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಇದೆ. ಲೋಕಸಭೆ ಚುನಾವಣೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಾಗುವುದು. ನಮ್ಮಲ್ಲಿರುವ ಮಾಹಿತಿಯನ್ನು ಅಮಿತ್ ಶಾ ಅವರೊಂದಿಗೆ ಹಂಚಿಕೊಳ್ಳುತ್ತೇವೆ ಎಂದರು.
ಒಟ್ಟಾರೆಯಾಗಿ ರಾಜ್ಯದ 28 ಕ್ಷೇತ್ರಗಳನ್ನು ನಮ್ಮ ಮೈತ್ರಿಕೂಟ ಗೆಲ್ಲಬೇಕು. ಅದಕ್ಕೆ ಪೂರಕವಾಗಿ ಎಲ್ಲ ರೀತಿಯಲ್ಲಿ ಚರ್ಚೆ ಮಾಡ್ತೇವೆ. ನಂತರ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋದಲ್ಲಿ ಇಬ್ಬರೂ ಭಾಗವಹಿಸುತ್ತೇವೆ. ಇಡಿ ರಾಜ್ಯಕ್ಕೆ ಚನ್ನಪಟ್ಟಣದಿಂದಲೇ ಒಂದು ಸ್ಪಷ್ಟ ಸಂದೇಶ ಕೊಡುತ್ತೇವೆ ಎಂದರು.