ರಾಜ್ಯ

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ : ಕರ್ನಾಟಕಕ್ಕೆ ಪ್ರಥಮ ಸ್ಥಾನ

ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ.

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,”2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ,” ಎಂದು ತಿಳಿಸಿದರು.

“ಇದು ಕೇವಲ ಅಂಕಿ-ಅಂಶವಲ್ಲ. ನಮ್ಮ ಬದ್ಧತೆ, ಯೋಜನೆಗಳನ್ನು ಕಾರ್ಯಗತಗೊಳಿಸುವ ನಮ್ಮ ಸಾಮರ್ಥ್ಯದ ಪ್ರತೀಕ. ರಾಜ್ಯದ ಕೈಗಾರಿಕೆಗಳಿಗೆ, ನಮ್ಮ ರೈತರಿಗೆ, ಮನೆಗಳಿಗೆ ಶುದ್ಧ ಇಂಧನ ಒದಗಿಸುವ ಇಚ್ಛಾ ಶಕ್ತಿಯಾಗಿದೆ,” ಎಂದು ಹೇಳಿದರು.

“ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಹೆಜ್ಜೆಗಳು ಹೊಸತೇನಲ್ಲ. 2009ರಲ್ಲಿ ನವೀಕರಿಸಬಹುದಾದ ಇಂಧನ ನೀತಿಯನ್ನು ಪ್ರಕಟಿಸಿದ ದೇಶದ ಮೊದಲ ರಾಜ್ಯ ನಮ್ಮದು. ನಾವು ಇಂದು ಈ ಎತ್ತರಕ್ಕೆ ಏರಲು ಅಂದೇ ಅಡಿಪಾಯ ಹಾಕಲಾಗಿತ್ತು. ನವೀಕರಿಸಬಹುದಾದ ಇಂಧನ ನೀತಿ 2022–2027 ನಮ್ಮ ದೂರದೃಷ್ಟಿಯ ಪ್ರತೀಕ. ಕೇವಲ ಸಾಮರ್ಥ್ಯ ಸೇರ್ಪಡೆ ಮಾತ್ರವಲ್ಲದೇ, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಲಾದ ನೀತಿ ಇದು. ಐಎಸ್‌ಟಿಎಸ್‌ ಮತ್ತು ಐಎನ್‌ಎಸ್‌ಟಿಎಸ್‌ ಯೋಜನೆಗಳು, ಹೈಬ್ರಿಡ್ ಮಾದರಿಗಳು, ಹಳೆಯ ಟರ್ಬೈನ್‌ಗಳಿಗೆ ಮರುಶಕ್ತಿ ತುಂಬುವುದು ಸೇರಿದಂತೆ ಡಿಜಿಟಲೀಕರಣ ಮತ್ತು ಜಿಯೋ-ಟ್ಯಾಗಿಂಗ್ ಮೂಲಕ ಸುಲಲಿತ ವ್ಯವಹಾರವನ್ನು ಬೆಂಬಲಿಸುತ್ತಿದೆ,” ಎಂದು ವಿವರಿಸಿದರು.

“ಕೇಂದ್ರ ಸರ್ಕಾರವು 2030ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ ಹೊಂದಿದ್ದು, ಪವನ ಶಕ್ತಿಯಿಂದಲೇ 100 ಗಿಗಾವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಿದೆ.ಈ ಗುರಿ ಸಾಧನೆಗೆ ಕರ್ನಾಟಕ ಬದ್ಧವಾಗಿದ್ದು, 17 ಗಿಗಾವ್ಯಾಟ್‌ ಪವನ ಶಕ್ತಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ನವೀಕರಿಸಬಹುದಾದ ಇಂಧನ ಕ್ಲಸ್ಟರ್‌ ಕಾರ್ಯಕ್ರಮದಡಿ, 5 ಗಿಗಾವ್ಯಾಟ್‌ಗಿಂತ ಹೆಚ್ಚು ಪವನ ವಿದ್ಯುತ್‌ ಸಾಮರ್ಥ್ಯ ಸೇರ್ಪಡೆಗೊಳಿಸಲಿದ್ದೇವೆ. ಇದನ್ನು ಸಾಧ್ಯವಾಗಲಿಸಲು 20ಕ್ಕೂ ಹೆಚ್ಚು ಸಬ್‌ ಸ್ಟೇಷನ್‌ಗಳು, 400 ಕೆ.ವಿ. ಕಾರಿಡಾರ್‌ಗಳು ಹಾಗೂ ನವೀಕರಿಸಬಹುದಾದದ ಇಂಧನದ ಮೀಸಲು ವಲಯ ಮುಂತಾದ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ,” ಎಂದು ಮಾಹಿತಿ ನೀಡಿದರು.

“ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದ್ದು, ಹೂಡಿಕೆದಾರರಿಗೆ ರಾಜ್ಯದ ಬಗ್ಗೆ ಇರುವ ವಿಶ್ವಾಸವನ್ನು ಇದು ಎತ್ತಿ ತೋರಿಸುತ್ತದೆ. 2025ರ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ನವೀಕರಿಸಬಹುದಾದ ಇಂಧನ ವಲಯಕ್ಕೆ 4 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಇದು ರಾಜ್ಯವು ಪಡೆದುಕೊಂಡಿರುವ ಒಟ್ಟು ಹೂಡಿಕೆಯ ಸುಮಾರು ಶೇ.40 ರಷ್ಟು,” ಎಂದರು.

ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಪ್ರಲ್ಹಾದ್‌ ಜೋಶಿ
ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ,”ಕರ್ನಾಟಕದವನಾಗಿ ರಾಜ್ಯ ಪವನ ವಿದ್ಯುತ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಇದು ಹನುಮನ ಜನ್ಮ ಭೂಮಿ. ಇಲ್ಲಿ ವಿಶ್ವ ಪವನ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ,” ಎಂದರು.

“ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದ್ದು, 51.5 ಗಿಗಾವ್ಯಾಟ್‌ ಸಾಮರ್ಥ್ಯವನ್ನು ಈಗಾಗಲೇ ಸ್ಥಾಪಿಸಲಾಗಿದೆ. 2030ರ ವೇಳೆಗೆ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇ. 50ಕ್ಕೆ ಏರಿಸುವ ಜತೆಗೆ 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆ ನಿವ್ವಳ ಶೂನ್ಯದ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ,”ಎಂದರು.

“2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದು. ಈ ಪೈಕಿ 30 ಗಿಗಾವ್ಯಾಟ್‌ ಕಡಲಾಚೆಯ ಪವನ ಶಕ್ತಿಯೂ ಸೇರಿ ಒಟ್ಟು 100 ಗಿಗಾವ್ಯಾಟ್‌ ಪವನ ವಿದ್ಯುತ್‌ ಕ್ಷೇತ್ರದ್ದಾಗಿರಲಿದೆ. ದೇಶೀಯ ನಿಯೋಜನೆ ಮಾತ್ರವಲ್ಲದೇ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳ ಭಾಗವಾಗಿಯೂ ದೇಶ ದೃಢ ಹೆಜ್ಜೆ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 3.5 ರಿಂದ 4 ಗಿ.ವ್ಯಾ. ಪವನ ಟರ್ಬೈನ್‌ಗಳು ಮತ್ತು ಘಟಕಗಳನ್ನು ರಫ್ತು ಮಾಡಿದೆ,”ಎಂದರು

ಪಂಪ್ಡ್‌ ಸ್ಟೋರೇಜ್‌ಗೆ ಒತ್ತು ನೀಡಬೇಕು
ಸದ್ಯದ ಮೂರು ಪ್ರಮುಖ ಸವಾಲುಗಳನ್ನು ಎದುರಿಸಲು ನಾವು ಸಜ್ಜಾಗಬೇಕು. ಮೊದಲನೆಯದಾಗಿ, ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮತ್ತು ಗ್ರಿಡ್ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆ ಜತೆಗೆ ಸಂಗ್ರಹಣೆಯನ್ನು ಸಂಯೋಜಿಸಬೇಕು ಅದಕ್ಕಾಗಿ, ಪಂಪ್ಡ್‌ ಸ್ಟೋರೇಜ್‌ನಂಥ ವ್ಯವಸ್ಥೆಗೆ ಒತ್ತು ನೀಡಬೇಕು. ಎರಡನೆಯದಾಗಿ, ವಿದ್ಯುತ್‌ ದರ ಸ್ಪರ್ಧಾತ್ಮಕವಾಗಿರಬೇಕು. ಮೂರನೆಯದಾಗಿ, ದೇಶೀಯ ಉತ್ಪಾದನೆಯಲ್ಲದೇ, ರಫ್ತು ಹೆಚ್ಚಳಕ್ಕೂ ಆದ್ಯತೆ ನೀಡಬೇಕು,”ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಇದೇ ವೇಳೆ, ‘ರ‍್ಯಾಂಪಿಂಗ್‌ಅಪ್‌ ಲೋಕಲ್‌ ಮ್ಯಾನುಫ್ಯಾಕ್ಚರಿಂಗ್‌ ಫಾರ್‌ ವಿಂಡ್‌ ಟರ್ಬೈನ್ಸ್‌ ಇನ್‌ ಇಂಡಿಯಾ’ವರದಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಕಾರ್ಯದರ್ಶಿ ಸಂತೋಷ್‌ ಕುಮಾರ್ ಸಾರಂಗಿ, ಕ್ರೆಡಲ್‌ ಅಧ್ಯಕ್ಷ ಟಿ.ಡಿ.ರಾಜೇಗೌಡ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಮತ್ತಿತ್ತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

42 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago