Mysore
16
clear sky

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಅತಿವೃಷ್ಠಿಯಿಂದ ಮನೆ, ಪ್ರಾಣ ಹಾನಿ; 48 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅನುದಾನ ಕೊರತೆ ಇರುವುದಿಲ್ಲ. ಹೀಗಾಗಿ, ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 551.25ಕೋಟಿ ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ ರೂ. 115.71 ಕೋಟಿ ಸೇರಿದಂತೆ ಒಟ್ಟು ರೂ. 666.96 ಕೋಟಿ ಹಣ ಲಭ್ಯವಿದ್ದು ಸಮರ್ಪಕವಾಗಿ ಬಳಸಿ ಎಂದು ನಿರ್ದೇಶಿಸಿದರು.

ನೆರೆ ಪೀಡಿತ ಪ್ರದೇಶಕ್ಕೆ ಸ್ವತಃ ಜಿಲ್ಲಾಧಿಕಾರಿಗಳೇ ಭೇಟಿ ನೀಡಿ
ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಹಿಂಗಾರು ಅವಧಿಯಲ್ಲಿ ಅಂದರೆ ಅಕ್ಟೋಬರ್‌ನಿಂದ ಡಿಸೆಂಬರ್‌ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು ಎಂದು ಮಾಹಿತಿ ನೀಡಿದರು.

ಈ ಬಾರಿ ಜಲವಿದ್ಯುತ್‌ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಕಣಿವೆ ಹಾಗೂ ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅತಿವೃಷ್ಠಯಿಂದ 25 ಮಂದಿ ಸಾವು
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ. ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವಿಗೀಡಾಗಿವೆ. ಎಸ್‌ಡಿಆರ್‌ಎಫ್‌ ನಿಯಮಾನುಸಾರ ದೊಡ್ಡ ಜಾನುವಾರುಗಳಿಗೆ ಒಟ್ಟು ರೂ. 6.84 ಲಕ್ಷ, ಸಣ್ಣ ಜಾನುವಾರುಗಳಿಗೆ ಒಟ್ಟು ರೂ. 2.8 ಲಕ್ಷ ಸೇರಿದಂತೆ ಒಟ್ಟು ರೂ. 9.6 ಲಕ್ಷ ಪರಿಹಾರ ಪಾವತಿಸಲಾಗಿದೆ ಎಂದರು.

ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಿ ಎಂದು ಸಿಎಂ ಸೂಚನೆ ನೀಡಿದರು.

ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸಲಾಗಿತ್ತು. ಬೆಂಗಳೂರು ಸುತ್ತಮುತ್ತ ಬಹುತೇಕ ಕೆರೆಗಳು ಕೇವಲ ಶೇ.30ರಷ್ಟು ಮಾತ್ರ ತುಂಬಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಬಳಿಕ ಕೆರೆಗಳ ಹೂಳೆತ್ತುವುದು ಸೇರಿದಂತೆ ಅಭಿವೃದ್ದಿ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ಸಹ ಇದಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಹೆಚ್ಚುವರಿ ಬಿತ್ತನೆ ಬೀಜ ಒದಗಿಸಿ
ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

Tags:
error: Content is protected !!