Mysore
19
few clouds
Light
Dark

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ: ಎಚ್‌ಡಿಕೆ

ಬೆಂಗಳೂರು : ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಕುಮಾರಸ್ವಾಮಿ. ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು ಎಂದು ವಗ್ಯವಾಡಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಎಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರ್ಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರ್ಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ, ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ?ವಿಶ್ವವಿಖ್ಯಾತ ವಿತ್ತತಜ್ಞ?ರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಕುಹಕವಾಡಿದ್ದಾರೆ.

ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್ ಹಸ್ತ, ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗುಗಳಲ್ಲಿಯೇ ?ಭಾರೀ? ಬ್ಯುಸಿ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿದಂತೆ ಪ್ರಧಾನಿಗಳನ್ನು, ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು?

ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ.

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್ ತಕಲಾಕ್ಕೊಂಡು ಹಾದಿಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಆನ್ಸರ್ ಮಾಡಿ ಸನ್ಮಾನ್ಯ ಸಿದ್ದರಾಮಯ್ಯನವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ