ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು.
ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.
ದಾವಣಗೆರೆಗೆ ಶಾಮನೂರು ಕೊಡುಗೆ ಸಾಕಷ್ಟಿದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದರು.
ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದರು.
ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ ಇದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023. ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.
ಗ್ಯಾರಂಟಿಯಿಂದ ಖಜಾನೆ ಖಾಲಿ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಾವು 1.40 ಕೋಟಿ ರೂ ಸಾಲ ಮಾಡಿದ್ದೇವೆ. ಬಿಜೆಪಿಯವರು 5.30 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ ಎಂದು ವಿವರಿಸಿದರು.





