ಕೋಲಾರ: ಬಿಜೆಪಿ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆ ತೋಡಿಕೊಂಡಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ಆಕಸ್ಮಿಕವಾಗಿ ಬದಲಾವಣೆ ಆದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ನನ್ನ ಹೆಸರನ್ನು ಪ್ರಸ್ತಾವನೆ ಮಾಡಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನಮ್ಮ ಹೆಸರು ಪ್ರಸ್ತಾಪ ಮಾಡಿರುವುದು ಸಂತೋಷ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರುವುದಕ್ಕೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾವೆಲ್ಲಾ ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರಗಳಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುತ್ತೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕೆಲಸ ಮಾಡುತ್ತೇನೆ. ನನಗೆ ಯಡಿಯೂರಪ್ಪ ಅವರ ಆಶೀರ್ವಾದ ಬೇಕಿದೆ. ಒಂದು ವೇಳೆ ಹೈಕಮಾಂಡ್ ಬದಲಾವಣೆ ಮಾಡಿದರೆ ನಾನು ಸಿದ್ಧನಿದ್ದೇನೆ ಎಂದರು.