ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ. ಅದು ಕಲ್ಲು-ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ. ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವವರೆಗೂ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೂ ನಡೆಸುತ್ತೇನೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಹೇಳಿದ್ದಾರೆ.





