ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡುವುದು, ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಹಿಂದೆ ಕೊಟ್ಟಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು ಶಾಸಕನಾಗಿ ಸದನ ವೀರ ಪ್ರಶಸ್ತಿ ಪಡೆದುಕೊಂಡಿದ್ದೆ. ಸಚಿವನಾಗಿದ್ದಾಗ ಒಳ್ಳೆಯ ಕೆಲಸ ಮಾಡಿ ರಾಷ್ಟ್ರ ಪ್ರಶಸ್ತಿಯೂ ಪಡೆದುಕೊಂಡಿದ್ದೇನೆ. ನನ್ನ ಕೆಲಸ ಗುರುತಿಸಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ಉಪನಾಯಕನಾಗಿ ಮಾಡಿದ್ದರು. ಈಗ ಸ್ಪೀಕರ್ ಮಾಡಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಮುಂದೆ ಏನು ಕೊಡುತ್ತಾರೆ ನೋಡೋಣ ಎಂದು ಹೇಳಿದರು.





