ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರು ಹಾಗೂ ಆಂಧ್ರ ಪ್ರದೇಶದ ಸಚಿವರಾದ ನಾ.ರಾ. ಲೋಕೇಶ್ ಅವರು ಉದ್ಘಾಟನೆ ನೆರವೇರಿಸಿದರು.
ಸಿಂಧನೂರು ಪಟ್ಟಣದಲ್ಲಿ ಶನಿವಾರ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ನೂತನ ಸೈನಿಕ ಶಾಲೆಗೆ ಹಸಿರುನಿಶಾನೆ ತೋರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು, ರಕ್ಷಣಾ ಕ್ಷೇತ್ರದಲ್ಲಿ ಭಾರತವನ್ನು ಸಾಟಿ ಇಲ್ಲದ ದೇಶವನ್ನಾಗಿ ರೂಪಿಸಲು ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಬಹುದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ. ಇದರ ಭಾಗವಾಗಿಯೇ ಸಿಂಧನೂರಿಗೆ ಸೈನಿಕ ಶಾಲೆಯನ್ನು ಮಂಜೂರು ಮಾಡಲಾಗಿದೆ. ಇದಕ್ಕಾಗಿ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅದೇ ಸಚಿವಾಲಯದ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವೆ ಎಂದು ಹೇಳಿದರು.
ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ಇದ್ದೇನೆ
ಮುಂದುವರೆದು ಮಾತನಾಡಿದ ಕೇಂದ್ರ ಸಚಿವರು; ಅಭಿವೃದ್ಧಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಿದರೆ ಮಾತ್ರ ರಾಜ್ಯಕ್ಕೆ ಒಳ್ಳೆದಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ನಾನು ಎಂದೆಂದಿಗೂ ರಾಜ್ಯ ಸರ್ಕಾರದ ಜೊತೆಗೆ ನಿಲ್ಲುತ್ತೇನೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅನೇಕ ಕೆಲಸಗಳು ಆಗಬೇಕಿದೆ. ಅದಕ್ಕಾಗಿ ರಾಜಕೀಯ ಭಿನ್ನಮತ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ. ನನ್ನ ಕಡೆಯಿಂದ ಏನೇ ಕೆಲಸ ಆಗಬೇಕಿದ್ದರೂ ಯಾರೇ ಆಗಲಿ ನನ್ನನ್ನು ಮುಕ್ತವಾಗಿ ಸಂಪರ್ಕಿಸಬಹುದು. ರಾಜ್ಯಕ್ಕೆ ಒಳ್ಳೆಯದು ಮಾಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂಬುದಾಗಿ ಸಚಿವರು ಹೇಳಿದರು.
ರಾಯಚೂರು ಜಿಲ್ಲೆಗೆ ಏಮ್ಸ್ (ಅಖಿಲ ಭಾರತ ವೈದ್ಯಕೀಯ ಸಂಸ್ಥೆ) ಬೇಕೆನ್ನುವ ಬೇಡಿಕೆ ಇದೆ. ಹಾಗೆಯೇ ತುಂಗಭದ್ರಾ ಜಲಾಶಯಕ್ಕೆ ಸಮಾನಂತರವಾಗಿ ನವಿಲೇ ಜಲಾಶಯ ನಿರ್ಮಾಣದ ಬೇಡಿಕೆ ಕೂಡ ಇದೆ. ಇವು ಸಣ್ಣ ಬೇಡಿಕೆಗಳಲ್ಲ. ಇವೆಲ್ಲವೂ ಈಡೇರಬೇಕಾದರೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಈ ಭಾಗದಲ್ಲಿ ಕೈಗಾರಿಕೆ ಬರಬೇಕು ಎಂದು ಇಲ್ಲಿನ ಶಾಸಕರು, ಹಿರಿಯರು ಆಗಿರುವ ಹಂಪನಗೌಡ ಬಾದರ್ಲಿ ಅವರು ಬೇಡಿಕೆ ಮಂಡಿಸಿದ್ದಾರೆ. ಅದಕ್ಕೆ ಸಂಸದರಾದ ಕುಮಾರ್ ನಾಯಕ ಅವರು ದನಿಗೂಡಿಸಿದ್ದಾರೆ. ಇದಕ್ಕೆ ನನ್ನ ಸಹಮತವೂ ಇದೆ. ಯಾವುದಾದರೂ ಒಂದು ಕೈಗಾರಿಕೆಯನ್ನು ಇಲ್ಲಿಗೆ ತರುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಿಮ್ಮ ಬೇಡಿಕೆಗೆ ಸ್ಪಂದಿಸುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು





