ಬೆಂಗಳೂರು : ಏಳು ಮಂದಿ ಐಎಎಸ್ ಅಧಿಕಾರಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡುವ ಜೊತೆಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಡಿಪಿಎಆರ್(ಇ-ಆಡಳಿತ) ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಯಕಾರಿ ಸದಸ್ಯರಾಗಿದ್ದ ಡಾ.ಎನ್.ಶಿವಶಂಕರ್ ಅವರನ್ನು ನಗರಾಡಳಿತ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಈ ಸ್ಥಾನದಲ್ಲಿದ್ದ ಅರ್ಚನಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ.