ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.
ಈ ಕುರಿತು ಮಾದ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಡಿಕೆ ಶಿವಕುಮಾರ್ ಅವರಿಗೆ ಚಿನ್ನದಂತ ಅವಕಾಶವಿದ್ದು, ತಾವು ಸತ್ಯಹರಿಶ್ಚಂದ್ರ ಎಂಬುದನ್ನು ಸಾಬೀತು ಪಡಿಸಲು ಇದು ಕಾಲಾವಕಾಶವಾಗಿದೆ. ನಮ್ಮ ಅವಧಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಂಡಿದ್ದು ರಾಜಕೀಯ ಪ್ರೇರತವಲ್ಲ. ಪ್ರಾಧಮಿಕ ತನಿಖೆಯನ್ನಾಧರಿಸಿ ಸಿಬಿಐಗೆ ಪ್ರಕರಣ ನೀಡಲಾಗಿತ್ತು ಎಂದು ಹೇಳಿದರು.
ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ತೀರ್ಮಾನ ಸಂಪೂರ್ಣವಾಗಿ ಕಾನೂನು, ಸಂವಿಧಾನಕ್ಕೆ ವಿರುದ್ಧವಾದುದು. ಈ ತೀರ್ಮಾನವನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಡಿ. ಕೆ. ಶಿವಕುಮಾರ್ ಅವರನ್ನು ರಕ್ಷಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿ.ಕೆ ಶಿವಕುಮಾರ್ ಅವರು ಭ್ರಷ್ಟರಲ್ಲದಿದ್ದರೆ ಸಿಬಿಐ ತನಿಖೆ ಎದುರಿಸಿ ಹೊರಬರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.
ಪ್ರತಿಭಟನೆ : ಸಿಬಿಐಗೆ ನೀಡಲಾಗಿದ್ದ ಪ್ರಕರಣವನ್ನು ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ(ನವೆಂಬರ್ ೨೫) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ. ಇಂದು ಯಾವ ರೀತಿಯ ಹೋರಾಟ ಮಾಡಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಎಚ್ಡಿಕೆ ಹೇಳಿದ್ದೇನು? : ವಕೀಲರಾಗಿ, ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ರಾಜ್ಯದ ಗದ್ದುಗೆ ಹಿಡಿದರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಸರಿಯಲ್ಲ. ಎರಡು ಬಾರಿ ಹೈ ತೀರ್ಪನ್ನು ಸುಪ್ರೀಂ ಉಲ್ಲೇಖಿಸಿರುವ ನಿದರ್ಶನಗಳಿದ್ದು, ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಸರ್ಕಾರದ ಈ ನಿರ್ಧಾರ ಸರಿಯಲ್ಲ. ಲೂಟಿ ಮಾಡುವವರಿಗೆ ಸರ್ಕಾರವೇ ಅವಕಾಶ ಕೊಟ್ಟಂತೆ ಇದ್ದು, ಕಾನೂನಿಗಿಂತ ಸರ್ಕಾರ ಮೇಲಿದೆ ಎಂಬುದನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಸರ್ಕಾರವನ್ನು ತಿವಿದಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಈ ಪ್ರಕರಣವನ್ನು ಹಿಂಪಡೆಯಲು ನೆನ್ನೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿತ್ತು.




