ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು.
ಇದನ್ನು ಓದಿ: ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್ ಗುಂಡೂರಾವ್
2018 ಹಾಗೂ 2023ರಲ್ಲಿ ತೋರಿಸಿಲ್ಲ ಎಂಬುದು ಅವರ ವಾದ ಎಂದು ಕೇಳಿದಾಗ, “ಅವರಿಗೇನು ಗೊತ್ತು? 2025 ರಲ್ಲೂ ಸಲ್ಲಿಕೆ ಮಾಡಿದ್ದೀನಲ್ಲಾ..?” ಎಂದು ತಿಳಿಸಿದರು.
ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರಂತೆ ಎಂದು ಕೇಳಿದಾಗ, “ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ” ಎಂದು ತಿರುಗೇಟು ನೀಡಿದರು.





