ಬೆಂಗಳೂರು: ರಾಜ್ಯದ ಹಲವು ಇಲಾಖೆಗಳಲ್ಲಿ ಅಧಿಕಾರಿಗಳು ತಮ್ಮ ಆದಾಯಕ್ಕೂ ಮೀರಿ ಅಧಿಕ ಆಸ್ತಿಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸದ ಮೇಲೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಇಂದು(ಡಿ.10) ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಗದಗ, ಕಲಬುರಗಿ, ಕೊಪ್ಪಳ ಹಾಗೂ ಚಿತ್ರದುರ್ಗದ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್ ಲೋಕೇಶ್ ಬಾಬು, ಬಿಬಿಎಂಪಿ ವಾರ್ಡ್ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು ಹಾಗೂ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್ ಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಇನ್ನು ಕಲಬುರಗಿ ಮಹಾನಗರಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ ನಿವಾಸ, ಫಾರ್ಮ್ ಹೌಸ್ ಹಾಗೂ ಕೊಪ್ಪಳದ ಅಬಕಾರಿ ನಿರೀಕ್ಷಕ ರಮೇಶ್ ಅಂಗಡಿ ನಿವಾಸದ ಮೇಲೂ ದಾಳಿ ಮಾಡಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.





